ಕಳೆದ ಮೂರು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯ ಮರುಮತ ಎಣಿಕೆಗೆ ರಾಜ್ಯ ಹೈಕೋರ್ಟ್ ಆದೇಶ ನೀಡಿದೆ. ಬಿಜೆಪಿ ಯ ಎಂಎಲ್ಸಿ ಹಾಲಿ ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ವಿರುದ್ಧ ಕೇವಲ ಆರು ಮತಗಳಿಂದ ಪರಾಭವಗೊಂಡಿದ್ದ ಕಾಂಗ್ರೇಶ್ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಅವರು ಫಲಿತಾಂಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ 30 ದಿನಗಳ ಒಳಗೆ ಮರು ಮತ ಎಣಿಕೆ ನಡೆಸುವಂತೆ ಆದೇಶಿಸಿದೆ.
ಬುಧವಾರ ರಾಜ್ಯ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಮುಂದಿನ 30 ದಿನದೊಳಗೆ ಮರು ಮತ ಎಣಿಕೆ ನಡೆಸಿ ವರದಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಏನಿದು ಪ್ರಕರಣ?: ಮೂರು ವರ್ಷಗಳ ಹಿಂದೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ.ಪ್ರಾಣೇಶ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.ವಿ.ಗಾಯತ್ರಿ ಶಾಂತೇಗೌಡ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಎ.ವಿ.ಗಾಯತ್ರಿ ಶಾಂತೇಗೌಡ ಕೇವಲ 6 ಮತಗಳ ಅಂತರದಲ್ಲಿ ಎಂ.ಕೆ.ಪ್ರಾಣೇಶ್ ವಿರುದ್ಧ ಪರಾಭವಗೊಂಡಿದ್ದರು.
ಚುನಾವಣೆ ಫಲಿತಾಂಶದಿಂದ ಅಸಮಾಧಾನಗೊಂಡ ಎ.ವಿ.ಗಾಯತ್ರಿ ಶಾಂತೇಗೌಡ ಸರಕಾರದ 12 ಜನ ನಾಮ ನಿರ್ದೇಶಕರ ಮತದಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಈ ಪ್ರಕರಣದ ತೀರ್ಪು ಪ್ರಕಟಿಸಿದ್ದು, ಈ 12 ಮತಗಳನ್ನು ಹೊರತುಪಡಿಸಿ ಮಾರ್ಚ್ 7ರ ಒಳಗೆ ಮರು ಮತ ಎಣಿಕೆ ಮಾಡಿ ವರದಿ ನೀಡುವಂತೆ ಆದೇಶಿಸಿದೆ.
ಇದರಿಂದಾಗಿ 12 ನಾಮನಿರ್ದೇಶನ ಸದಸ್ಯರನ್ನು ಹೊರತುಪಡಿಸಿ ಮತಎಣಿಕೆ ನಡೆಸಿದ್ದೇ ಆದಲ್ಲಿ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ತೀರ್ಪಿನ ವಿರುದ್ಧ ಎಂ.ಕೆ. ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಎಂ.ಕೆ. ಪ್ರಾಣೇಶ್ ಅವರು ನಾನು ಸುಪ್ರೀಂ ಕೋರ್ಟ್ ನಲ್ಲಿ ಹಾಕಿದ್ದ ರಿಟ್ ಅರ್ಜಿಯೊಂದು ಇನ್ನೂ ವಿಚಾರಣೆಗೆ ಬಂದಿಲ್ಲ. ನನ್ನ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇರುವಾಗ ಹೈಕೋರ್ಟ್ ನೀಡಿರುವ ತೀರ್ಪಿನ್ನು ಪ್ರಶ್ನಿಸಿ ನಾನು ಮತ್ತೊಮ್ಮೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದೇನೆ.
ನಾಮನಿರ್ದೇಶನ ಸದಸ್ಯರಿಗೆ ಮತದಾನದ ಹಕ್ಕು ನೀಡುವ ವಿಚಾರದಲ್ಲಿ ಚುನಾವಣೆಗೆ ಮುನ್ನವೇ ತಕರಾರು ಸಲ್ಲಿಸಲು ಅವಕಾಶವಿತ್ತು. ಆಗ ಯಾರೂ ಇದನ್ನು ಪ್ರಶ್ನಿಸಿಲ್ಲ. ಈಗ ಚುನಾವಣೆ ಆದ ನಂತರ ಫಲಿತಾಂಶವನ್ನು ಪ್ರಶ್ನಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧ ನಡೆಯಾಗಿದೆ. ನ್ಯಾಯಾಲಯದ ತೀರ್ಪನ್ನು ನಾನು ಸದಾ ಗೌರವಿಸುತ್ತಿದ್ದು, ಈ ವಿಚಾರವಾಗಿ ಕಾನೂನು ತಜ್ಞರ ಸಲಹೆ ಪಡೆದು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದೇನೆ ಎಂದಿದ್ದಾರೆ.



