ವಸತಿ ಶಾಲೆಯ ವಿದ್ಯಾರ್ಥಿನಿಯರನ್ನು ಪುಸಲಾಯಿಸಿ ಮತ್ತು ಬರುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಅಂಚೆಚೋಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಪ್ಯಾರಾ ಮೆಡಿಕಲ್ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ನಂಬಿಸಿ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಗುತ್ತಿಗೆ ಡಿ, ದರ್ಜೆ ನೌಕರ ಸುರೇಶ್, ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಅಧಿಕಾರಿ ಚಂದನ, ಆಕೆಯ ಪ್ರಿಯಕರ ವಿನಯ್ ಕುಮಾರ್ ಬಂಧಿತ ಆರೋಪಿಗಳು.
ಅಂಚೆಚೋಮನಹಳ್ಳಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಡಿ ದರ್ಜೆ ನೌಕರ ಸುರೇಶ್ ಶಾಲೆಯ ವಿದ್ಯಾರ್ಥಿಯರಿಗೆ ಪ್ಯಾರಾ ಮೆಡಿಕಲ್ ಉದ್ಯೋಗ ಸಿಗುತ್ತದೆ ಎಂದು ತಿಳಿಸಿ ಪ್ಯಾರಾ ಮೆಡಿಕಲ್ ಕೋರ್ಸ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಭರವಸೆ ನೀಡಿ ಪೋಷಕರನ್ನೂ ನಂಬಿಸಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯರನ್ನು ಅಂಚೆಚೋಮನಹಳ್ಳಿ ಗ್ರಾಮದಲ್ಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾ ಕೇಂದ್ರಕ್ಕೆ ಕರೆತರುತ್ತಿದ್ದು ವಿದ್ಯಾರ್ಥಿನಿಯರನ್ನು ರಾತ್ರಿ ಅಲ್ಲಿಯೇ ವಾಸ್ತವ್ಯ ಮಾಡಲು ಹೇಳುತ್ತಿದ್ದರು ಎನ್ನಲಾಗಿದೆ.
ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಚಂದನಾ ಕಾಫಿ ಹಾಗೂ ಚಹಾದಲ್ಲಿ ಮತ್ತು ಬರುವ ಔಷಧಿ ಹಾಕುತ್ತಿದ್ದಳು ಎನ್ನುವ ಆರೋಪ ಇದೆ.
ನಂತರ ಚಂದನಾಳ ಪ್ರಿಯಕರ ವಿನಯ್ಕುಮಾರ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಆರೋಪಿಸಲಾಗಿದೆ.
ಕಳೆದ ಎರಡು ಮೂರು ತಿಂಗಳಿನಿಂದ ಈ ಕೃತ್ಯ ನಡೆಯುತ್ತಿದ್ದು ಅನುಮಾನ ಬಂದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರೋಪಿಗಳ ಚಲನವಲನದ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿ ಫೋಕ್ಸೋ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಪ್ರಕರಣ ಅತ್ಯಂತ ಭಯಾನಕವಾಗಿದ್ದು, ಮುಗ್ದ ವಿದ್ಯಾರ್ಥಿನಿಯರಿಗೆ ಈ ರೀತಿಯ ಮೋಸ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ವಸತಿ ಶಾಲೆಯ ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆಯೇ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಕಠಿಣ ಶಿಕ್ಷಯಾಗುವಂತೆ ನೋಡಿಕೊಳ್ಳಬೇಕಾಗಿದೆ.



