ಕರ್ನಾಟಕ ರಾಜ್ಯ ವಿರೋಧ ಪಕ್ಷದ ನಾಯಕರಾಗಿ ಪದ್ಮನಾಭನಗರ ಕ್ಷೇತ್ರದಬಿ.ಜೆ.ಪಿ.ಹಿರಿಯ ಶಾಸಕ ಆರ್ ಅಶೋಕ್ ಆಯ್ಕೆಯಾಗಿದ್ದಾರೆ
ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರ್ ಅಶೋಕ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ
ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಮುಖಂಡರಾದ ದುಶ್ಯಂತ್ ಗೌತಮ್ ಅವರ ಉಪಸ್ಥಿತಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ್ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚಿಸಿದರು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅನುಮೋದಿಸಿದರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಪಕ್ಷ ನಾಯಕನಾಗಿ ಆರ್. ಅಶೋಕ್ ಅವರ ಹೆಸರನ್ನು ಘೋಷಣೆ ಮಾಡಿದರು.
ಈ ಮೂಲಕ ಕಳೆದ ಆರು ತಿಂಗಳಿಂದ ಖಾಲಿ ಇದ್ದ ವಿಧಾನಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ಕೊನೆಗೂ ಆಯ್ಕೆ ಮಾಡಿದಂತಾಗಿದೆ.
ಆರ್.ಅಶೋಕ್ ಅವರು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಏಳು ಬಾರಿ ಶಾಸಕರಾಗಿರುವ ಅಶೋಕ್ ಅವರು ರಾಜ್ಯದಲ್ಲಿ ಸಚಿವರಾಗಿಯು ಸೇವೆ ಸಲ್ಲಿಸಿದ್ದರು.
ಬಿ.ಎಸ್.ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ವಿವಿಧ ಖಾತೆಗಳನ್ನು ನಿಭಾಯಿಸಿದ್ದಾರೆ. ಅಲ್ಲದೇ ರಾಜ್ಯದ ಉಪಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಬಿ.ಜೆ.ಪಿ.ಯಲ್ಲಿ ಒಕ್ಕಲಿಗ ಜನಾಂಗದಪ್ರಬಲ ನಾಯಕರಾಗಿದ್ದಾರೆ.


