ರಾಜ್ಯದ ಸಹಕಾರ ಬ್ಯಾಂಕುಗಳಲ್ಲಿರುವ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಚಳಿಗಾಲ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಈ ಬಾರಿ ರಾಜ್ಯದಲ್ಲಿ ಎದುರಾಗಿರುವ ಬರಗಾಲದ ಹಿನ್ನೆಲೆಯಲ್ಲಿ ರೈತರು ಮಧ್ಯಮಾವಧಿ ಮತ್ತು ದೀರ್ಘಾವಧಿ ಬೆಳೆಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದರು.
ಬಡ್ಡಿ ಒಟ್ಟು 300 ಕೋಟಿಯಷ್ಟು ಇರಬಹುದು. ಅದನ್ನು ಮನ್ನಾ ಮಾಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು. ರೈತರ ಬಡ್ಡಿ ಮನ್ನಾ ಘೋಷಣೆಗೆ ಮಾಜಿ ಸಹಕಾರ ಸಚಿವ ಶಾಸಕ ಎಸ್ಟಿ ಸೋಮಶೇಖರ್ ಸೇರಿದಂತೆ ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಬರದಿಂದ ಕಂಗೆಟ್ಟ ರೈತರಿಗೆ ಪ್ರತೀ ಎಕರೆಗೆ 25 ಸಾವಿರ ಪರಿಹಾರ ಘೋಷಣೆ ಮಾಡಬೇಕು ಅಂತ ಆಗ್ರಹಿಸಿದರು.
ಕೃಷಿ ಪತ್ತಿನ ಸಹಕಾರ ಸಂಘ, ಡಿ.ಸಿ.ಸಿ. ಬ್ಯಾಂಕ್ ಮತ್ತು ಪಿ.ಸಿ.ಎ.ಆರ್.ಡಿ. ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲಗಳಿಗೆ ಈ ಬಡ್ಡಿಮನ್ನಾ ಯೋಜನೆ ಅನ್ವಯವಾಗುತ್ತದೆ. ಆದರೆ ರಾಜ್ಯದ ರೈತರಿಗೆ ಸಹಕಾರ ಬ್ಯಾಂಕ್ ಮತ್ತು ಸಂಘಗಳಲ್ಲಿ ರೂ. 3 ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು ನೀಡಲಾಗುತ್ತಿದೆ. ಹಾಗಾಗಿ ಸಣ್ಣ ಮತ್ತು ಅತಿಸಣ್ಣ ರೈತರು ಪಡೆದಿರುವ ಬೆಳೆಸಾಲಕ್ಕೆ ಬಡ್ಡಿ ಇರುವುದಿಲ್ಲ. ಸಕಾಲದಲ್ಲಿ ಸಾಲ ಮರುಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವವರಿಗೆ, ಸುಸ್ತಿಯಾಗಿರುವವರಿಗೆ ಮಾತ್ರ ಈ ಯೋಜನೆಯಿಂದ ಲಾಭವಾಗಬಹುದು ಎಂದು ಹೇಳಲಾಗುತ್ತಿದೆ. ಯೋಜನೆಯ ಬಗ್ಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ ಬಳಿಕವಷ್ಟೇ ಈ ಯೋಜನೆಯಿಂದ ಯಾರಿಗೆಲ್ಲಾ ಅನುಕೂಲವಾಗಲಿದೆ ಎಂಬುದು ಸ್ಪಷ್ಟವಾಗಲಿದೆ.



