ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಗೆಲುವಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿದ್ದಾರೆ.
ವಿಧಾನಸೌಧದಲ್ಲಿ ಕರ್ತವ್ಯದಲ್ಲಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಅಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್ನು ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ಜ್ಯೋತಿ ಗಣೇಶ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಅಲ್ಲದೇ ಪಾಕ್ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕೆಂದು ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದರು.
ನಿನ್ನೆ ವಿಧಾನ ಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೇಸ್ 3 ಮತ್ತು ಬಿ.ಜೆ.ಪಿ. 1 ಸ್ಥಾನಗಳಲ್ಲಿ ಜಯಗಳಿಸಿತ್ತು. ರಾಜ್ಯಸಭೆಗೆ ಎರಡನೇ ಬಾರಿ ಆಯ್ಕೆಯಾದ ನಾಸೀರ್ ಹುಸೇನ್ ಅವರು ಜಯಗಳಿಸಿದ ನಂತರ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಘೋಷಣೆಗಳನ್ನು ಕೂಗಿದ್ದು, ಈ ಘೋಷಣೆ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.


