ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಟಿಕೆಟ್ ಗಾಗಿ ಸಾಕಷ್ಟು ಆಕಾಂಕ್ಷಿಗಳು ಇದ್ದು ಇದೀಗ ಕೆಪಿಸಿಸಿಯ ರಾಜ್ಯ ವಕ್ತಾರರರಾಗಿರುವ, ಸಾಮಾಜಿಕ ಚಿಂತಕ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿಗೆ ಟಿಕೆಟ್ ನೀಡಬೇಕೆಂದು ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಸೇರಿದಂತೆ ಹಿರಿಯ ಮುಖಂಡರು ಬೆಂಗಳೂರಿನಲ್ಲಿ ಲಾಬಿ ಆರಂಭಸಿದ್ದಾರೆ.
ಮಂಗಳವಾರ ಹಲವು ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸುಧೀರ್ ಕುಮಾರ್ ಮುರೊಳ್ಳಿಗೇ ಟಿಕೆಟ್ ನೀಡಿ ಎಂದು ಮನವಿ ಮಾಡಿದ್ದಾರೆ.
ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ವಿನಯ್ ಕುಮಾರ್ ಸೊರಕೆ, ಶೃಂಗೇರಿ ಕ್ಷೇತ್ರದ ಶಾಸಕ ಟಿ. ಡಿ. ರಾಜೇಗೌಡ, ಕಾರ್ಕಳದ ಉದಯ್ ಕುಮಾರ್ ಶೆಟ್ಟಿ, ಕುಂದಾಪುರದ ದಿನೇಶ್ ಹೆಗ್ಡೆ, ಉಡುಪಿಯ ರಮೇಶ್ ಕಾಂಚನ್, ಉಡುಪಿ ಜಿಲ್ಲಾ ಎನ್ಎಸ್ಯುಐ ಅಧ್ಯಕ್ಷ ಸೌರವ್ ಬಲ್ಲಾಳ್, ದೀಪಕ್ ಕೋಟ್ಯಾನ್ ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಉಮಾ ಐ.ಬಿ. ಶಂಕರ್, ಲಕ್ಷ್ಮೀಶ್ ಗಬ್ಬಲಡ್ಕ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಅಸಗೋಡು ನಾಗೇಶ್, ಚನ್ನಗಿರಿ ಗೌಡ, ಕುಕ್ಕುಡಿಗೆ ರವೀಂದ್ರ, ಮಲೆನಾಡು ಕರಾವಳಿ ಜನಪರ ಒಕ್ಕೂಟದ ಸಂಚಾಲಕ ಅನಿಲ್ ಹೊಸಕೊಪ್ಪ, ಪ್ರವೀಣ್ ಹೊಳೆಕೊಪ್ಪ, ವಿಜಯತೇಜ್ ಶೆಟ್ಟಿ, ಸಂದೇಶ್ ಕೊಪ್ಪ, ಶ್ರೀಜಿತ್ ದಂಡಿನಮಕ್ಕಿ ದುರ್ಗಾ ಚರಣ್ ಕುಂಚೂರು ಸೇರಿದಂತೆ 50 ಕ್ಕೂ ಹೆಚ್ಚು ಪ್ರಮುಖ ನಾಯಕರು ಈ ನಿಯೋಗದಲ್ಲಿದ್ದರು.

ನಮ್ಮ ಮಲೆನಾಡು ಕರಾವಳಿಯ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿರುವ ಹಾಗೂ ಇಲ್ಲಿಯ ಸ್ಥಳೀಯ ಸಮಸ್ಯೆಗಳಿಗೆ ಹೋರಾಟ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ವಕ್ತಾರರಾಗಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಈ ಬಾರಿ ಅವರ ಪಕ್ಷದಿಂದ ಟಿಕೆಟ್ ನೀಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಅವರಿಗೆ ಪಕ್ಷ ಟಿಕೆಟ್ ನೀಡಿದಲ್ಲಿ ಈ ಹಿಂದೆ ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರ ಮರಳಿ ಪಕ್ಷದ ಹಿಡಿತಕ್ಕೆ ಸಿಕ್ಕುವುದರಲ್ಲಿ ಅನುಮಾನವಿಲ್ಲ ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟದ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದ್ದಾರೆ.



