ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದ್ದ ಉಗ್ರನನ್ನು ಹಾಗೂ ಪ್ರಕರಣಕ್ಕೆ ಸಂಚು ರೂಪಿಸಿದ್ದ ಮಾಸ್ಟರ್ ಮೈಂಡ್ ಉಗ್ರನನ್ನು ಕೊಲ್ಕತ್ತದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ಪೊಲೀಸರ ನೆರವಿನೊಂದಿಗೆ ಬಾಂಬ್ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮಾರ್ಚ್ 1ರಂದು ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿದ್ದ ಪ್ರಕರಣ ನಡೆದಿತ್ತು ಘಟನೆಯಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು. ದೇಶವನ್ನೇ ಬೆಚ್ಚಿಬೀಳಿಸಿದ್ದ ಈ ಪ್ರಕರಣದ ಆರೋಪಿಗಳ ಬೆನ್ನು ಹತ್ತಿದ್ದ ಎನ್.ಐ.ಎ ತಂಡ ಪ್ರಕರಣ ನಡೆದ 40 ನಲವತ್ತು ದಿನಗಳ ನಂತರ ಉಗ್ರರ ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳ ಸುಳಿವು ನೀಡಿದವರಿಗೆ ಹತ್ತು ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು.
ಕೆಫೆಯಲ್ಲಿ ಬಾಂಬ್ ಇರಿಸಿದ್ದ ಉಗ್ರ ಮುಸ್ಸಾವೀರ್ ಹುಸೇನ್ ಮತ್ತು ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಇವರುಗಳನ್ನು ಕಲ್ಕತ್ತಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಭವಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿತ್ತು. ಇವರಲ್ಲಿ ಓರ್ವ ಚಿಕ್ಕಮಗಳೂರು ಮೂಲದವನಾಗಿದ್ದ.



