ಹಾಸನ ನಗರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಇಬ್ಬರು ವ್ಯಕ್ತಿಗಳು ಗುಂಡೇಟಿನಿಂದ ಮೃತಪಟ್ಟಿರುವ ಘಟನೆ ಇಂದು ಹಾಡಹಗಲೇ ನಡೆದಿದೆ.
ಓರ್ವ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ವ್ಯವಹಾರದ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಹಾಸನದ ಶರಾಫತ್ ಅಲಿ (52), ಬೆಂಗಳೂರಿನ ಆಶಿಫ್ (45) ಮೃತರಾಗಿದ್ದಾರೆ. ನಿವೇಶನ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದು. ಈ ವಿಚಾರದ ಬಗ್ಗೆ ಇಂದು ಮಾತುಕತೆ ನಡೆಸಲು ಬಂದಾಗ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಹತ್ಯೆಯಲ್ಲಿ ಅಂತ್ಯವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮೃತರಲ್ಲಿ ಶರಾಪತ್ ಆಲಿ ಶುಂಠಿ ವ್ಯಾಪಾರಿ, ಆಶೀಫ್ ರಿಯಲ್ ಎಸ್ಟೇಟ್ ಉದ್ಯಮಿ ಎನ್ನಲಾಗಿದೆ. ಇಬ್ಬರು ಹಲವು ವರ್ಷಗಳಿಂದ ಸ್ನೇಹಿತರು, ಒಟ್ಟಿಗೆ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿ ಒಂದೇ ಕಾರಿನಲ್ಲಿ ನಿವೇಶನದ ಸಮೀಪಕ್ಕೆ ಹೋಗಿದ್ದರು. ಆ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಶರಾಫತ್ ಅಲಿಗೆ ಗುಂಡು ಹಾರಿಸಿ ನಂತರ ಆಶೀಫ್ ಕಾರಿನಲ್ಲೇ ಗುಂಡು ಹಾರಿಸಿ ಆತ್ಮಹತ್ಯೆ ಶರಣಾಗಿದ್ದಾರೆ.
ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ನೀಡಿದ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇಂದು(ಜೂ.20) ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿದ್ದ ಕಾರು ಮೈಸೂರು ಮೂಲದ್ದು ಎನ್ನಲಾಗಿದೆ. ಕಾರಿನ ಹೊರಗಿರುವ ಶವದ ತಲೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ. ಸೈಟ್ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿರುವ ಮಾಹಿತಿ ಇದೆ. ಆದರೆ, ವಾಸ್ತವ ಏನೆಂಬುದು ತನಿಖೆಯ ನಂತರ ತಿಳಿಯಬೇಕಿದೆ ಎಂದು ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದರು.


