ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಚಿಕ್ಕಮಗಳೂರು ತಹಶೀಲ್ದಾರ್ ಸುಮಂತ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪರಸಪ್ಪ ಕೂಸೂರ ಈಗಾಗಲೇ ಸರ್ಕಾರವು ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಓಪಿಎಸ್ ಜಾರಿಗೊಳಿಸುವ ಭರವಸೆ ನೀಡಿ ರುವ ಹಿನ್ನೆಲೆಯಲ್ಲಿ ಬೇಡಿಕೆ ಈಡೇರಿಸಿ ಅನುಕೂಲ ಕಲ್ಪಿಸಿಕೊಡಬೇಕು ಎಂದರು.
ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಓಪಿಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ಎನ್ಪಿಎಸ್ನ್ನು ಯಥಾವತ್ತಾಗಿ ಜಾರಿ ಮಾಡಬೇಕು. ನೇಮಕಾತಿ, ಪ್ರಾಧಿಕಾರದ ವಂತಿಗೆಯನ್ನು ಆಡಳಿತ ಮಂಡಳಿಗಳ ಬದಲಾಗಿ ಸರ್ಕಾರ ಭರಿಸಲು ಕ್ರಮ ವಹಿಸಬೇಕು ಎಂದರು.
ರಾಜ್ಯದ ಖಾಸಗೀ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ ವಿಧೇಯಕಕ್ಕೆ ತಿದ್ದುಪಡಿ ತರಬೇಕು ಅಥವಾ ರದ್ದುಪಡಿಸಿ ಭವಿಷ್ಯಾವರ್ತಿ ಯಾಗಿ ಜಾರಿಗೆ ಬರುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಅನುದಾನಿತ ನೌಕರರಿಗೆ ಕೂಡ ಸರ್ಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆಯಡಿ ಯಥಾವತ್ತಾಗಿ ಜಾರಿಯಾಗಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹೀಗಾಗಿ ಅನುದಾನಿತ ನೌಕರರಿಗೆ ಪ್ರಮುಖ ಬೇಡಿಕೆಗಳನ್ನು ಮಾನವೀಯ ಕಾಳಜಿ ಹಿನ್ನೆಲೆಯಲ್ಲಿ ಈಡೇರಿಸಲು ಸರ್ಕಾರ ಶೀಘವೇ ಕ್ರಮ ಕೈಗೊಳ್ಳಬೇಕು. ಸಹನೂಭೂತಿಯಿಂದ ಅನುದಾನಿತ ಶಾಲೆ ಕಾಲೇ ಜುಗಳ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ಈಡೇರಿಕೆಗೆ ಮುಂದಾಗಬೇಕು ಎಂದರು.
ಪ್ರಸ್ತುತ ರಾಜ್ಯಸರ್ಕಾರ ಅಧಿಕಾರಕ್ಕೆ ಬಂದು ವರ್ಷವನ್ನು ಪೂರೈಸುತ್ತಿದೆ. ಹೀಗಾಗಿ ಹೆಚ್ಚಿನ ವಿಳಂಬ ನೀತಿ ಅನುಸರಿಸದೇ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಾವಿರಾರು ನೌಕರರನ್ನು ಮತ್ತೆ ಹೋರಾಟಕ್ಕೆ ಅವಕಾಶ ನೀಡದಂತೆ ನ್ಯಾಯಯುತ ಬೇಡಿಕೆಗಳನ್ನು ತ್ವರಿತಗತಿಯಲ್ಲಿ ಈಡೇರಿಸಿ ನೌಕರರ ಜೀವನ ಸುಧಾರಣೆಗೆ ಅನು ಕೂಲ ಮಾಡಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಅಧ್ಯಕ್ಷ ರಘು, ಉಪಾಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ಪ್ರಕಾಶ್, ಸದಸ್ಯರುಗಳಾದ ನಟರಾಜ್, ಧನಂಜಯ್, ಜೆಲ್ಲಿಕೆ ಜಾರ್ಜ್, ಸುಜಾತ, ಸಂತೋಷ್, ಅಣ್ಣಪ್ಪಶೆಟ್ಟಿ, ವೆಂಕಟೇಶ್, ಪ್ರಸನ್ನ, ಶಿವರುದ್ರಪ್ಪ, ಎನ್.ಜಿ.ಚಂದ್ರಪ್ಪ, ಮಹೇಂದ್ರಕುಮಾರ್ ಹಾಜರಿದ್ದರು.



