ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಹಾಗೂ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚವ್ಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್ ಅವರ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಪ್ರಲ್ಹಾದ್ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದ್ದು ಬೆಂಗಳೂರಿಗೆ ಕರೆತರಲಾಗುತ್ತಿದೆ.
ದೂರು ದಾಖಲಾಗುತ್ತಿದ್ದಂತೆ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುನೀತ್ ಚವ್ಹಾಣ್ ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣ ಸಂಬಂಧ ಇಲ್ಲಿಯುವರೆಗೂ ನಾಲ್ವರನ್ನು ಬಂಧಿಸಲಾಗಿದೆ.



