ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಕೇಂದ್ರ ಕಾಫಿ ಸಂಶೋಧನಾ ಕೇಂದ್ರದಲ್ಲಿ ಕಾಫಿ ಕೌಶಲಾಭಿವೃದ್ಧಿ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ, ಇದಕ್ಕೆ ಅಗತ್ಯ ಅನುದಾನ ನೀಡಲು ಕೇಂದ್ರ ಬದ್ಧವಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟದಿಂದ ಸಕಲೇಶಪುರ ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಕಾಫಿ ಬೆಳವಣಿಗೆಗೆ ಮುಂದೆ ಬರುವ ನವೋದ್ಯಮಗಳಿಗೆ ಅಗತ್ಯ ಸೌಕರ್ಯ ನೀಡಲು ನಿರ್ಧರಿಸಲಾಗಿದೆ. ಇದರಿಂದ ಕಾಫಿ ಸಂಸ್ಕರಣೆ, ಬ್ರಾಂಡ್, ಮಾರಾಟಕ್ಕೆ ಹೆಚ್ಚು ಸಹಕಾರಿ ಆಗಲಿದೆ’ ಎಂದರು.
‘ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯು 2011ರಿಂದ ಸ್ಥಗಿತಗೊಂಡಿದ್ದು, ಅದನ್ನು ಮರು ಜಾರಿಗೊಳಿಸಲಾಗಿದೆ. ಈ ಮೂಲಕ ಕಾಫಿ ಗುಣಮಟ್ಟದ ವೃದ್ಧಿ. ಯಾಂತ್ರೀಕರಣಕ್ಕೆ ಒತ್ತು ನೀಡಲಾಗುವುದು. ಕಾಫಿ ಬೆಳೆಗಾರರಿಗೆ ಸಹಾಯಧನ ನೀಡಲು ರೂ.100 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲಾಗುವುದು’ ಎಂದರು.

‘ಬೆಳೆ ಸಾಲವು ಸರ್ಫೇಸಿ ಕಾಯ್ದೆಯಡಿ ಬರುವುದಿಲ್ಲ. ಆದರೆ, ಬಹುತೇಕ ಬೆಳೆಗಾರರು ಜಮೀನು ಅಡಮಾನವಿಟ್ಟು ಸಾಲ ಪಡೆದಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಕೆನರಾ ಬ್ಯಾಂಕ್ ಡಿಸೆಂಬರ್ 26 ಹಾಗೂ 27ರಂದು ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಲೋಕ ಅದಾಲತ್ ಆಯೋಜಿಸಿದೆ’ ಎಂದರು.
‘ಮಾನವ ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಲು ಬೆಂಗಳೂರಿನ ಐಐಎಸ್ಸಿ ಪ್ರಾಧ್ಯಾಪಕ ಸುರೇಂದ್ರ ವರ್ಮಾ ನೇತೃತ್ವದ ಸಮಿತಿ ನೀಡುವ ವರದಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಆನೆ ಕಾರಿಡಾರ್ಗೆ ಸಂಬಂಧಿಸಿದಂತೆ ಹೆಚ್.ಡಿ. ಕುಮಾರಸ್ವಾಮಿ. ಈ ಭಾಗದ ಸಂಸದರು, ಶಾಸಕರೊಂದಿಗೆ ಕೇಂದ್ರ ಪರಿಸರ ಸಚಿವರ ಜೊತೆಗೆ ಚರ್ಚೆ ನಡೆಸುತ್ತೇನೆ. ‘ಪಿಎಂ ಗತಿಶಕ್ತಿ’ ಯೋಜನೆಯಡಿ ಸ್ಯಾಟಲೈಟ್ ಸಮೀಕ್ಷೆ ನಡೆಸಲಾಗುವುದು ಎಂದರು.
ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಂಸದರಾದ ತೇಜಸ್ವಿ ಸೂರ್ಯ, ಶ್ರೇಯಸ್ ಪಟೇಲ್, ಶಾಸಕರಾದ ಎಸ್.ಮಂಜುನಾಥ್, ಹೆಚ್.ಕೆ. ಸುರೇಶ್, ಮಂಥರ್ ಗೌಡ, ಸ್ವರೂಪ್ ಪ್ರಕಾಶ್, ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್, ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಶ್ರೀಮತಿ ಮೋಟಮ್ಮ ಸೇರಿದಂತೆ ಅನೇಕ ಗಣ್ಯರು, ಕಾಫಿ ಬೆಳೆಗಾರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಹಾಸನ, ಚಿಕ್ಕಮಗಳೂರು, ಕೊಡಗು ಭಾಗದ ಜನಪ್ರತಿನಿಧಿಗಳು, ಕರ್ನಾಟಕ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷರುಗಳು, ವಿವಿಧ ಬೆಳೆಗಾರರ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ. ಹೆಚ್.ಟಿ. ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಮಾವೇಶದ ಅಂಗವಾಗಿ ಕೃಷಿ ಮೇಳವನ್ನು ಆಯೋಜಿಸಲಾಗಿತ್ತು.



