ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದರು.
ಹುತಾತ್ಮ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿತ್ತು.
ಘರೋವಾ ಪ್ರದೇಶದಲ್ಲಿ ಸಂಜೆ 5:20 ರ ಸುಮಾರಿಗೆ ಆರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನವು ಜಿಲ್ಲೆಯ ಬನೋಯ್ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
11 ಮದ್ರಾಸ್ ಲೈಟ್ ಇನ್ಫೆಂಟ್ರಿಗೆ ಸೇರಿದ ವಾಹನವು ನಿಲಂ ಪ್ರಧಾನ ಕಛೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್ಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಗೊಂಡ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನೆ ತಿಳಿಸಿದೆ.
ಸುದ್ದಿ ತಿಳಿದು ಹುತಾತ್ಮ ಯೋಧರ ಸಂಬಂಧಿಕರು ಹಾಗೂ ಸ್ನೇಹಿತರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ದೇಶ ಸೇವೆಗಾಗಿ ಹುತಾತ್ಮರಾದ ಯೋಧರ ತ್ಯಾಗ, ಬಲಿದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸ್ಮರಿಸಿದ್ದಾರೆ.
ಮಣಿಪುರದಲ್ಲಿ ಸೇನಾವಾಹನ ಅಪಘಾತ : ಬೆಳಗಾವಿ ಮೂಲದ ಯೋಧ ಸಾವು
ಮಣಿಪುರದಲ್ಲಿ ಸಂಭವಿಸಿದ ಸೇನಾವಾಹನ ಅಪಘಾತದಲ್ಲಿ ಬೆಳಗಾವಿ ಮೂಲದ ಯೋಧ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮಣಿಪುರದ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಮಂಗಳವಾರ ಸೇನಾ ವಾಹನ ಉರುಳಿ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ್ (42) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಆರು ಯೋಧರು ಕರ್ತವ್ಯ ಮುಗಿಸಿಕೊಂಡು ವಾಪಸ್ ಕ್ಯಾಂಪ್ ಗೆ ಬರುವಾಗ ಕಣಿವೆ ಬಳಿ ಭೂಮಿ ಕುಸಿದು ವಾಹನ ಕಂದಕಕ್ಕೆ ಉರುಳಿತು. ಗಾಯಗೊಂಡ ಎಲ್ಲ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಧರ್ಮರಾಜ ಖೋತ್ ಅವರು ಅಲ್ಲೇ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.



