ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆ-2013ನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ಸ್ಥಾಪಿಸುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾನಾಗರಾಜ್ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕಾಯ್ದೆ 2013 ನ್ನು ಕುರಿತು ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸುಪ್ರೀಂ ಕೋರ್ಟ್ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವಂತೆ ನಿರ್ದೇಶನ ನೀಡಿದೆ. ಅದರಂತೆ ಕೆಲಸದ ಸ್ಥಳಗಳಲ್ಲಿ ಮಹಿಳೆ ನೆಮ್ಮದಿಯಿಂದ ಕಾರ್ಯನಿರ್ವಹಿಸುವಂತಾಗಲು 10 ಕ್ಕಿಂತ ಹೆಚ್ಚು ಮಹಿಳಾ ಸಿಬ್ಬಂದಿ ಬಂದು ಕೆಲಸದ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ. ಅಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ರಚಿಸಲು ಈಗಾಗಲೇ ಎಲ್ಲಾ ಇಲಾಖೆಗಳಿಗೂ ನಿರ್ದೇಶನ ನೀಡಲಾಗಿದೆ. ಆಂತರಿಕ ದೂರು ಸಮಿತಿ ರಚಿಸದೇ ಇರುವ ಇಲಾಖೆಗಳು ಕೂಡಲೇ ಸಮಿತಿ ರಚಿಸಲು ಕ್ರಮವಹಿಸುವಂತೆ ತಿಳಿಸಿದ ಅವರು ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ವಿವರಗಳನ್ನು ನಿಯಮಿತವಾಗಿ ಅಪ್ ಡೇಟ್ ಮಾಡುವಂತೆ ಹೇಳಿದರಲ್ಲದೆ, ದೂರು ಸಮಿತಿ ರಚಿಸದ ಇಲಾಖೆಗಳ ಅಧಿಕಾರಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಇಂದು ಸ್ತ್ರೀ ಮತ್ತು ಪುರುಷರು ಇಬ್ಬರೂ ಸಮಾನರು ಆದ್ದರಿಂದ ಪುರುಷರಿಗೆ ಇರುವಷ್ಟು ಎಲ್ಲಾ ಸೌಕರ್ಯ ಸೌಲಭ್ಯಗಳು ಮಹಿಳೆಯರಿಗೂ ದೊರಕಬೇಕು. ಒಂದು ವೇಳೆ ಯಾವುದೇ ರೀತಿಯ ದೌರ್ಜನ್ಯ ಅನ್ಯಾಯಗಳು ಆಗುತ್ತಿದ್ದರೆ. ಆಂತರಿಕ ದೂರು ಸಮಿತಿಗೆ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ನೀಡಿ ನ್ಯಾಯ ದೊರಕಿಸಿ ಕೊಳ್ಳಬೇಕು ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ ಮಾತನಾಡಿ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವ ಇಲಾಖೆಗಳಲ್ಲಿ ಕಡ್ಡಾಯವಾಗಿ ಆಂತರಿಕ ದೂರು ಸಮಿತಿಯನ್ನು ರಚಿಸುವಂತೆ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ಮಾತನಾಡಿದರು. ವಕೀಲರಾದ ಡಿ.ಎಸ್. ಮಮತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ-2013ರ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ.ನ ಡಿ.ವೈ.ಎಸ್.ಪಿ ಶೈಲೇಂದ್ರ, ಜಿಲ್ಲಾ ಮಟ್ಟದ ಸ್ಥಳೀಯ ಸಮಿತಿ ಅಧ್ಯಕ್ಷರಾದ ಯಮುನಾ ಚೆನ್ನಬಸಪ್ಪ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಮುಂತಾದವರಿದ್ದರು.


