ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರು ನಡೆಸಿದ ಕಲ್ಲಿನ ದಾಳಿಯಲ್ಲಿ ಇನ್ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿವೆ. 10 ಕ್ಕೂ ಹೆಚ್ಚು ಪೊಲೀಸ್ ವಾಹನಗಳ ಜಖಂ ಆಗಿವೆ.
ದೆಹಲಿ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಯುವಕನೊಬ್ಬ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ಪೋಟೋಗಳನ್ನು ಬಳಸಿ ಮುಸ್ಲೀಮರಿಗೆ ಅವಹೇಳನಕಾರಿಯಾಗುವಂತ ಪೋಸ್ಟ್ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದ, ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಇನ್ಸ್ಪೆಕ್ಟರ್ ಸೇರಿ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದೆ. ಎಸಿಪಿ ಶಾಂತ ಮಲ್ಲಪ್ಪ, ನಜರಬಾದ್ ಇನ್ಸ್ಪೆಕ್ಟರ್ ಮಹದೇವಸ್ವಾಮಿ ಸೇರಿ 14 ಮಂದಿಗೆ ಕಲ್ಲೇಟು ಬಿದ್ದಿದೆ.
ಕಲ್ಲೇಟಿನಿಂದ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 10 ಕ್ಕೂ ಪೊಲೀಸ್ ವಾಹನಗಳ ಮೇಲೆ ಕಲ್ಲೂ ತೂರಾಟ ನಡೆದಿದೆ.
ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಸುರೇಶ್ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್ಬುಕ್ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದಾರೆ.
ಪೋಸ್ಟ್ ವಿಚಾರಕ್ಕೆ ಗಲಾಟೆ ತೆಗೆದಿರುವ ಸ್ಥಳೀಯರು ದಾಂಧಲೆ ಸೃಷ್ಟಿಸಿದ್ದಾರೆ. ಪೊಲೀಸ್ ಠಾಣೆ ಹಾಗೂ ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಉದಯಗಿರಿ ಠಾಣೆ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಯುವಕರನ್ನ ಮಾರ್ಕ್ ಮಾಡಿ ಕ್ರಮಕ್ಕೆ ಮುಂದಾಗಿದ್ದಾರೆ.
ಎಡಿಜಿಪಿ ಆರ್ ಹಿತೇಂದ್ರ ಮಾತನಾಡಿ ; ಗಲಾಟೆ ಮಾಡಿದವರ ಬಂಧನಕ್ಕೆ ಸ್ಥಳೀಯ ಪೊಲೀಸರಿಂದ ತಂಡ ರಚನೆ ಮಾಡಲಾಗಿದೆ. ಅವಹೇಳನಕಾರಿ ಪೋಸ್ಟರ್ ಹಾಕಿದ ವಿಚಾರದಲ್ಲಿ ಆರೋಪಿಯನ್ನು ಬೇಗ ಬಿಟ್ಟು ಬಿಡುತ್ತಾರೆ ಎಂದು ಕೆಲವರು ಗಲಾಟೆ ಮಾಡಿದ್ದಾರೆ. ಪೋಸ್ಟರ್ ವಿಚಾರದಲ್ಲಿ ಕೆಲವು ವಂದತಿ ಹಬ್ಬಿದ್ದಕ್ಕೆ ಗಲಾಟೆಯಾಗಿದೆ. ಗಲಾಟೆಯ ಹಿಂದೆ ಯಾರಿದ್ದಾರೆ? ಯಾವುದಾದರೂ ಸಂಘಟನೆ ಇದೆಯಾ ಎಂದು ತನಿಖೆಯಿಂದ ಗೊತ್ತಾಗಲಿದೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದು ಅವರು ಹೇಳಿದ್ದಾರೆ.
ಏನಿದು ಪ್ರಕರಣ ?
ವ್ಯಕ್ತಿಯಬ್ಬ ಮಾಡಿದ ಅವಹೇಳನಕಾರಿ ಪೋಸ್ಟ್ ವಿರುದ್ಧ ಸೋಮವಾರ ರಾತ್ರಿ ಪೊಲೀಸ್ ಠಾಣೆ ಎದುರು ಇದ್ದಕ್ಕಿದ್ದಂತೆ ಸೇರಿದ ನೂರಾರು ಜನರು ಪ್ರತಿಭಟನೆ ನಡೆಸಿ, ಕಲ್ಲು ತೂರಾಡ ನಡೆಸಿದ್ದರಂದಾಗಿ ಉದ್ವಿಗ್ನಗೊಂಡಿತ್ತು.
ಸಂಸದ ರಾಹುಲ್ ಗಾಂಧಿ, ಉತತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿವಸ್ತ್ರಗೊಳಿಸಿ, ಭಾವಿಚಿತ್ರಕ್ಕೆ ತಲೆ ಮೇಲೆ ಮುಸ್ಲಿಮರು ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದ ಬರೆದು ಪೋಸ್ಟ್ ಮಾಡಿದ್ದರಿಂದ ಮುಸ್ಲಿಂ ಸಮುದಾಯ ತೀವ್ರವಾಗಿ ಕೆರಳಿತ್ತು.
ಸಾವಿರಾರು ಮಂದಿ ಏಕಕಾಲದಲ್ಲಿ ಉದಯಗಿರಿ ಮುಖ್ಯ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದರು. ಅಲ್ಲದೆ, ಒಂದು ಗುಂಪು ಉದಯಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಗುಂಪು ಚದುರಿಸಿದ್ದರು.
ಈ ನಡುವೆ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿ ಪರಮೇಶ್ವರ್ ಅವರು, ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.



