ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಮೂಲದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್(30) ಮೃತ ಯುವಕ. ಕುಟುಂಬಸ್ಥರ ಜೊತೆ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿತಿನ್ ತಾಯಿ ಪುಷ್ಪ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ನಿತಿನ್ ಬಿಜೆಪಿ ಹಾಸನ ಜಿಲ್ಲೆ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದರು ಮತ್ತು ಸ್ನೇಹಜೀವಿಯಾಗಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ. ಅವರ ಸಾವಿಗೆ ಅಪಾರ ಸಂಖ್ಯೆಯ ಸ್ನೇಹ ಬಳಗ, ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.



