ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಸ್ಕೂಲ್ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ಭದ್ರಾನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಕಳಸ ಪಬ್ಲಿಕ್ ಸ್ಕೂಲ್ ನಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಳೆಹೊಳೆ ಮೂಲದ ವಿದ್ಯಾರ್ಥಿ ಮೂಲದ ಶ್ರೇಯಸ್ ಎಂಬ ವಿದ್ಯಾರ್ಥಿ ಮಾರ್ಚ್ 16ರಿಂದ ಕಾಣೆಯಾಗಿದ್ದ. ಶಾಲೆ ಬಿಟ್ಟ ನಂತರ ವಿದ್ಯಾರ್ಥಿ ಮನೆಗೆ ತೆರಳಿರಲಿಲ್ಲ. ಈ ಬಗ್ಗೆ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿದ್ಯಾರ್ಥಿ ಪತ್ತೆಗಾಗಿ ಹುಡುಕಾಟ ನಡೆಸಲಾಗಿತ್ತು. ಮಂಗಳವಾರ ಸಂಜೆ ಕಳಸ ಬಾಳೆಹೊಳೆ ನಡುವಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಶವವನ್ನು ಮೇಲಿತ್ತಿ ಪರಿಶೀಲಿಸಲಾಗಿ ಅದು ನಾಪತ್ತೆಯಾಗಿದ್ದ ವಿದ್ಯಾರ್ಥಿಯದೆಂದು ಪತ್ತೆಯಾಗಿತ್ತು.
ವಿದ್ಯಾರ್ಥಿ ಮೂಲತಃ ಬೇಲೂರು ತಾಲ್ಲೂಕಿನವನಾಗಿದ್ದು, ಸುರೇಶ್ ಶೆಟ್ಟಿ ಮತ್ತು ಜಯಂತಿ ಎಂಬುವವರ ಪುತ್ರ. ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ಕಳಸ ಪಬ್ಲಿಕ್ ಸ್ಕೂಲ್ ಗೆ ಹೋಗುತ್ತಿದ್ದ. ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೆಲವು ದಿನಗಳು ಇರುವಂತೆ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಶಾಲೆಬಿಟ್ಟ ನಂತರ ಭದ್ರಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರಬಹುದೇ ? ಈತನೊಂದಿಗೆ ಬೇರೆ ಸ್ನೇಹಿತರು ತೆರಳಿದ್ದರೆ ? ಯಾರಾದರೂ ಕೊಲೆ ಮಾಡಿರಬಹುದೇ ? ತಾನೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ? ಹೀಗೆ ಈ ಪ್ರಕರಣದ ಬಗ್ಗೆ ಹಲವಾರು ಅನುಮಾನಗಳು ಮೂಡಿವೆ.
ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ರಾಜಶೇಖರ್ ಮಾರ್ಗದರ್ಶನದಲ್ಲಿ ತನಿಖೆ ನಡೆಯುತ್ತಿದೆ.
ಬಾಲಕನ ಪೋಷಕರು ಈ ಬಗ್ಗೆ ದೂರು ನೀಡುತ್ತಿದ್ದು, ಶವವನ್ನು ಕಳಸ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿದುಬಂದಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಲಂಕುಷ ತನಿಖೆ ನಡೆಸಬೇಕು ಎಂದು ಶಾಲೆಯ ಪೋಷಕರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.



