ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಮತ್ತು ವರ್ಷಪೂರ್ತಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿ ಸೇವೆ ಅವಿಸ್ಮರಣೀಯ. ವೈಯಕ್ತಿಕ ಬದುಕಿನ ಜೊತೆಗೆ ಸಮಾಜದ ಕೆಲಸದಲ್ಲಿ ತೊಡಗಿರುವುದು ಸಾಮಾನ್ಯದ ವಿಷಯವಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.
ಚಿಕ್ಕಮಗಳೂರು ನಗರದ ರಾಮನಹಳ್ಳಿ ಪೊಲೀಸ್ ಕವಾಯಿತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬುಧವಾರ ಏರ್ಪಡಿಸಿದ್ಧ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪೊಲೀಸ್ ವೃತ್ತಿಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳಿಗೆ ಆತ್ಮಾಭಿಮಾನವಿದೆ. ತಮ್ಮ ತಂದೆ ಪೊಲೀಸ್ ವೃತ್ತಿಯಲ್ಲಿದ್ದವರು. ತಾವು ಪೊಲೀಸ್ ಕುಟುಂಬ ದವರೆಂದು ಹೇಳಿಕೊಳ್ಳಲು ಹೆಚ್ಚಿನ ಖುಷಿ ಇದೆ ಎಂದ ಅವರು, ಪೊಲೀಸ್ ನಿವೃತ್ತರಿಗೆ ಕುಂದುಕೊರತೆ ಆಲಿಸಿದಂತೆ, ವಿವಿಧ ಇಲಾಖೆಗಳಲ್ಲಿ ನಿವೃತ್ತರಾದವರಿಗೆ ಆಯಾ ಇಲಾಖೆ ಸ್ಪಂದಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ವರದಿ ಮಂಡಿಸಿ, ಸಮಾಜಕ್ಕಾಗಿ ದುಡಿಯುತ್ತಿರುವ ಪೊಲೀಸರಿಗೆ ಉಚಿತ ವೈದ್ಯಕೀಯ ಸೌಲಭ್ಯ, ಕಣ್ಣಿನ ತಪಾಸಣೆ ಹಾಗೂ ಅತಿಹೆಚ್ಚು ಅಂಕಗಳಿಸಿದ ಪೊಲೀಸ್ ಸಿಬ್ಬಂದಿ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಕರ್ಯ ಕಲ್ಪಿಸಿ ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಪೊಲೀಸ್ ಸಿಬ್ಬಂದಿಯ ಪಥಸಂಚಲನ ನಡೆಯಿತು. ಧ್ವಜ ದಿನಾಚರಣೆ ಪ್ರಯುಕ್ತ ವೇದಿಕೆ ಮೇಲೆ ಅಧಿಕಾರಿಗಳು ಧ್ವಜದ ಬಿಲ್ಲೆ ಬಿಡುಗಡೆಗೊಳಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ.ಜಯಕುಮಾರ್, ಸತ್ಯನಾರಾಯಣ ಇದ್ದರು.



