ಮೂಡಿಗೆರೆ ಪಟ್ಟಣ ಹೊರವಲಯದಲ್ಲಿರುವ ಮುದ್ರೆಮನೆ ಕಾಫಿ ಕ್ಯೂರಿಂಗ್ ನ ಹಸ್ಕ್ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಭಾನುವಾರ ನಡೆದಿತ್ತು.
ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಕೆಲ ಪ್ರಮಾಣದ ಕಾಫಿ ಹೊಟ್ಟು ಸುಟ್ಟುಹೋಗಿದೆ.
ಕಾಫಿ ಹಲ್ಲರ್ ಮಾಡಿದ ಬಳಿಕ ಉಳಿದ ಹೊಟ್ಟನ್ನು ಗೊದಾಮಿನಲ್ಲಿ ಸಂಗ್ರಹಿಸಿಡಲಾಗಿತ್ತು. ಭಾನುವಾರ ಬೆಳಿಗ್ಗೆ ಗೋದಾಮಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪರಿಶೀಲಿಸಿದಾಗ ಗೋದಾಮಿನ ಒಂದು ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿತ್ತು. ವಿಷಯ ತಿಳಿಯುತಿದ್ದಂತೆ ಮೂಡಿಗೆರೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಆದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಚಿಕ್ಕಮಗಳೂರು ಹಾಗೂ ಬೇಲೂರಿನಿಂದ ಹೆಚ್ಚುವರಿ ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅಂತಿಮವಾಗಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾದರು.
ಕಾಫಿಹೊಟ್ಟು ಸಂಗ್ರಹದ ಒಂದು ಭಾಗದಲ್ಲಿ ತೇವಾಂಶದಿಂದ ಹೆಚ್ಚಿನ ಶಾಖ ಉತ್ಪತ್ತಿಯಾಗಿ ಈ ರೀತಿಯ ಘಟನೆಗೆ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ.
ಸಮಯಕ್ಕೆ ಸರಿಯಾಗಿ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.



