ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ವಿಫಲವಾಗಿರುವುದರಿಂದ ಸಿಪಿಐ ತಾಲೂಕು ಸಮಿತಿ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದು, ಜನಾಂದೋಲನ ನಡೆಸಲಾಗುವುದು ಎಂದು ಸಿಪಿಐ ಚಿಕ್ಕಮಗಳೂರು ತಾಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್ ತಿಳಿಸಿದರು.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಲೆ ಏರಿಕೆಯನ್ನು ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದ್ದು, ಜನರನ್ನು ಸಂಕಷ್ಟಕ್ಕೆ ದೂಡುವಂತಹ ಜನವಿರೋಧಿ ನೀತಿಗಳನ್ನು ಅನುಸರಿಸುವ ಮೂಲಕ ಜನರು ಬೀದಿಗೆ ಬೀಳುವಂತೆ ಮಾಡಿವೆ ಎಂದು ಆರೋಪಿಸಿದರು.
ಬೆಲೆ ಏರಿಕೆಯನ್ನು ತಡೆಗಟ್ಟುವುದಾಗಿ ಆಶ್ವಾಸನೆ ನೀಡುವುದರೊಂದಿಗೆ 2014 ರಲ್ಲಿ ಅಧಿಕಾರದ ಗದ್ದುಗೆ ಏರಿದ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರ ತಲೆಯ ಮೇಲೆ ಬೆಲೆಏರಿಕೆ ಹೊರೆಯನ್ನು ಹೊರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ೫೦ ರೂಪಾಯಿ ಹೆಚ್ಚಿಸುವುದರೊಂದಿಗೆ ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯನ್ನು ಎಳೆದಿದೆ ಲೇವಡಿ ಮಾಡಿದರು.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಆಹಾರ ಪದಾರ್ಥಗಳಲ್ಲದೆ ಚಿನ್ನ, ಕಬ್ಬಿಣ, ಸಿಮೆಂಟ್ ಸೇರಿದಂತೆ ಗೃಹೋಪಯೋಗಿ ಸಾಮಾಗ್ರಿಗಳ ಬೆಲೆಗಳು ಗಗನಕ್ಕೇರಿವೆ. ಇತ್ತ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪ್ರೋತ್ಸಾಹಧನ ನೀಡುವುದಾಗಿ ರೈತರ ಹೆಸರಿನಲ್ಲಿ ಹಾಲಿನ ದರವನ್ನು ಏರಿಸಿದೆ. ವಿದ್ಯುತ್, ನೀರು, ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ಜನರ ಬದುಕನ್ನು ಸಂಕಷ್ಟಕ್ಕೆ ದೂಡಿದೆ ಎಂದು ಹೇಳಿದರು.
ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ಸಿ.ವಸಂತ್ಕುಮಾರ್ ಮಾತನಾಡಿ, ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳ ಮುಖಂಡರು ಪರಸ್ಪರ ಒಬ್ಬರನೊಬ್ಬರು ಆರೋಪ, ಪತ್ಯಾರೋಪದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ರಾಜಕೀಯ ತಿಕ್ಕಾಟದ ನಡುವೆ ಬೆಲೆ ಏರಿಕೆಯ ಹೊರೆಯನ್ನು ಜನಸಾಮಾನ್ಯರು ಹೊರುವಂತಾಗಿದೆ ಎಂದು ದೂರಿದರು.
ಸಿಪಿಐ ತಾಲೂಕು ಸಮಿತಿ ಸದಸ್ಯ ಜರ್ಮಿಲೋಬೋ ಮಾತನಾಡಿ, ಬಿಜೆಪಿ ಜನರ ಸಮಸ್ಯೆಗೆ ಸ್ಪಂದಿಸುವ ಬದಲು ಭಾವನಾತ್ಮಕ ವಿಷಯಗಳಿಗೆ ಒತ್ತು ನೀಡುತ್ತಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳೆರಡು ಬೆಲೆಗಳನ್ನು ಹೆಚ್ಚಿಸಿದ್ದು, ಕಡಿಮೆ ಮಾಡುವತ್ತಾ ಗಮನ ಹರಿಸದೆ ಬೀದಿಗಿಳಿದು ಹೋರಾಟಕ್ಕೆ ಮುಂದಾಗಿರುವುದು ವಿಪರ್ಯಾಸವೆಂದರು.
ಪತ್ರಿಕಾಗೋಷ್ಠಿಯಲ್ಲಿ ಸಿಪಿಐ ನಗರ ಕಾರ್ಯದರ್ಶಿ ತಂಪಿತಗೌಡ ಇದ್ದರು.



