ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆರೆಗಳ ಸರ್ವೆ ಕಾರ್ಯ ನಡೆಸಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸುವಂತೆ ಹಲವಾರು ಬಾರಿ ತಿಳಿಸಿದ್ದರೂ ಇದುವರೆಗೂ ಕೆರೆಗಳ ಒತ್ತುವರಿ ತೆರೆವುಗೊಳಿಸಿಲ್ಲ, ಒತ್ತುವರಿ ತೆರವುಗೊಳಿಸಲು ಕೂಡಲೇ ಕ್ರಮ ವಹಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯಾ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿ, ಕಂದಾಯ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸೇರಿದ 1.810 ಕೆರೆಗಳಿದ್ದು ಈಗಾಗಲೇ 1.744 ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ ,ಇನ್ನು 66 ಕೆರೆಗಳು ಅಳತೆಯಾಗಬೇಕಾಗಿದ್ದು, 777 ಕೆರೆಗಳ ಒತ್ತುವರಿಯನ್ನು ಗುರುತಿಸಲಾಗಿದೆ. ಇವುಗಳಲ್ಲಿ 301 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದೆ.
ಒತ್ತುವರಿ ತೆರವುಗೊಳಿಸಲು ಇನ್ನೂ 476 ಕೆರೆಗಳು ಬಾಕಿಯಿವೆ ಎಂದ ಅವರು, ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 124 ಕೆರೆಗಳಿದ್ದು ಈ ಪೈಕಿ 34 ಕೆರೆಗಳು ಹಿಡುವಳಿ, ಅರಣ್ಯ, ಗೋಮಾಳ ಜಮೀನಿನಲ್ಲಿವೆ. ಪಿ.ಆರ್.ಇ.ಡಿ. ವ್ಯಾಪ್ತಿಯಲ್ಲಿ 880 ಕೆರೆಗಳಿದ್ದು 876 ಕೆರೆಗಳ ಸರ್ವೆ ಕಾರ್ಯ ಮುಗಿದಿದ್ದು, ಇನ್ನು 4 ಕೆರೆಗಳ ಸರ್ವೇ ಕಾರ್ಯ ಬಾಕಿಯಿದೆ. 356 ಕೆರೆಗಳು ಒತ್ತುವರಿಯಾಗಿದ್ದು, 184 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದೆ.
ಇನ್ನೂ 172 ಕೆರೆಗಳು ಒತ್ತುವರಿ ತೆರವುಗೊಳಿಸಲು ಬಾಕಿಯಿವೆ. ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 834 ಕೆರೆಗಳಿದ್ದು, ಅವುಗಳಲ್ಲಿ ಅಳತೆಯಾಗಿರುವ ಕೆರೆಗಳು 785, ಅಳತೆ ಮಾಡಲು ಬಾಕಿ ಇರುವ ಕೆರೆಗಳು 49, ಒತ್ತುವರಿ ಗುರುತಿಸಿದ ಕೆರೆಗಳು 379, ಒತ್ತುವರಿ ತೆರವುಗೊಳಿಸಿರುವ ಕೆರೆಗಳು 103, ಒತ್ತುವರಿ ತೆರವುಗೊಳಿಸಲು ಬಾಕಿ ಇರುವ ಕೆರೆಗಳು 276. ಈ ಕೆರೆಗಳ ಒತ್ತುವರಿಯನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದರು.
ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಸಂಬಂಧ ಅರಿವು ಮೂಡಿಸುವಂತೆ ಸೂಚಿಸಲಾಗಿತ್ತು, ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ವಿಫುಲ ಅವಕಾಶಗಳಿದ್ದು, ರೈತರಿಗೆ ತರಬೇತಿ ನೀಡುವಂತೆ ತಿಳಿಸಿದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ ಸಭೆಗೆ ಮಾಹಿತಿ ನೀಡಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಕೊಪ್ಪಳಕ್ಕೆ ರೈತರನ್ನು ಅಧ್ಯಯನಕ್ಕಾಗಿ ಕರೆದುಕೊಂಡು ಹೋಗಿ ಬರಲಾಗಿದೆ ಎಂದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆಗೆ ಭೂಮಿಯನ್ನು ಹದ ಮಾಡಿಕೊಳ್ಳುತ್ತಿದ್ದಾರೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಯಾವುದೇ ಕೊರತೆ ಇರುವುದಿಲ್ಲ ಎಂದು ಕೃಷಿ ಜಂಟಿ ನಿರ್ದೇಶಕಿ ಸುಜಾತ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಲು ಸೂಚಿಸಿದರು. ತರೀಕೆರೆ ತಾಲ್ಲೂಕಿನ ಬೇಗೂರು, ಮಲ್ಲೇನಹಳ್ಳಿ ಸೇರಿದಂತೆ ಏಳು ಗ್ರಾಮಗಳಲ್ಲಿ ಬೋರ್ವೆಲ್ ಕೊರೆದು ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಪಿ.ಆರ್.ಇ.ಡಿ. ಇಂಜಿನಿಯರ್ ತಿಳಿಸಿದರು.
ಎಲ್ಲಾ ಇಲಾಖೆಗಳು ಕೂಡ ಇ-ಕಚೇರಿ ಮುಖಾಂತರ ಕಾರ್ಯ ನಿರ್ವಹಿಸಬೇಕು. ಚಿಕ್ಕಮಗಳೂರು ಜಿಲ್ಲೆ ಪೈಲೆಟ್ ಜಿಲ್ಲೆಯಾಗಿರುವುದರಿಂದ ಇತರ ಜಿಲ್ಲೆಗಳಿಗೆ ಮಾದರಿಯಾಗಬೇಕೆಂದು ಎಂದು ಹೇಳಿದರು.
ಎಲ್ಲಾ ಇಲಾಖೆಗಳು ಕೂಡ ಯಾವುದೇ ಕಾಮಗಾರಿ ಕೈಗೊಂಡರೂ ಆ ಕಾಮಗಾರಿಯ ಜಿ.ಪಿ.ಎಸ್. ಫೋಟೋವನ್ನು ಕಡ್ಡಾಯವಾಗಿ ನಮೂದಿಸುವಂತೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಂಕರ್ ಕೊರವರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
28sಸಿಕೆಎಂ1: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯಾ ಅಧ್ಯಕ್ಷತೆಯಲ್ಲಿ ನಡೆಯಿತು.



