ಸರಕಾರಗಳ ರೈತ ವಿರೋಧಿ ನೀತಿಗಳಿಂದ ರೈತರು ಕಷ್ಟದ ಮೇಲೆ ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಎಲ್ಲಾ ರೈತರು ಸಂಘಟಿತರಾಗುವ ಅನಿವಾರ್ಯತೆ ಎದುರಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ ಹೇಳಿದರು.
ಅವರು ಜೂ.9ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ಜಿಲ್ಲಾ ರೈತ ಸಮಾವೇಶದ ಬಗ್ಗೆ ಬುಧವಾರ ಪಟ್ಟಣದ ತಾಲೂಕು ಬೆಳೆಗಾರ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ತೋಟ, ಗದ್ದೆಗಳನ್ನು ಪಾಳು ಬಿಡುವ ಸ್ಥಿತಿ ಉಂಟಾಗಿದೆ. ಇದರ ನಡುವೆ ಸರಕಾರದ ದ್ವಂದ್ವ ನಿಲುವಿನಿಂದಾಗಿ ರೈತರು ಇನ್ನಷ್ಟು ಸಂಕಷ್ಟ ಎದುರಿಸುವಂತಾಗಿದೆ. ರೈತರ ಸಮಸ್ಯೆ ಬಗೆಹರಿಸಿಕೊಳ್ಳಲು ಜಿಲ್ಲೆಯ ಎಲ್ಲಾ ರೈತರು ಒಗ್ಗೂಡುವ ಅವಶ್ಯಕತೆ ಇದೆ ಎಂದು ಹೇಳಿದರು.
ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಮಾತನಾಡಿ, ಕಾಫಿ ಬೆಳೆಗಾರರನ್ನು ಎಚ್ಚರಿಸುವ ಕೆಲಸವಾಗಬೇಕು. ಇಂದು ಬೆಳೆಗಾರರು ಮತ್ತು ರೈತರು ಅನೇಕ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಯಾವುದೇ ಸಮಸ್ಯೆ ಪರಿಹಾರಕ್ಕೆ ಜನಶಕ್ತಿಯೇ ನಿರ್ಣಾಯಕವಾಗಿರುವುದರಿಂದ ಜೂ.9ರಂದು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ರೈತ ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಮೂಡಿಗೆರೆ ತಾಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ವಿಜಯ್ ಕುಮಾರ್, ಕೆಜಿಎಫ್ ಕಾರ್ಯದರ್ಶಿ ಟಿ.ಪಿ.ಸುರೇಂದ್ರ, ಕೆ.ಜಿ.ಎಫ್. ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಮ್, ಅಶೋಕ್ ಸೂರಪ್ಪನಹಳ್ಳಿ, ಸುರೇಶ್ ಆಲ್ದೂರು, ಕೆ.ಡಿ.ಮನೋಹರ್, ದೀಪಕ್ ದೊಡ್ಡಯ್ಯ, ಶಿವರಾಜ್ ಕಲ್ಮನೆ ಮುಂತಾದವರು ವೇದಿಕೆಯಲ್ಲಿದ್ದರು.
ವಿವಿಧ ರಾಜಕೀಯ ಪಕ್ಷ ಮತ್ತು ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.




