ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಗೆ ಹಲವು ಅನಾಹುತಗಳು ಸಂಭವಿಸುತ್ತಿವೆ.
ಮೂಡಿಗೆರೆಯಿಂದ ಕೊಟ್ಟಿಗೆಹಾರ ಸಂಪರ್ಕಿಸುವ ರಸ್ತೆಯಲ್ಲಿ ಒಂದೇ ದಿನ ಮೂರು ಕಾರುಗಳು ಚಾಲಕರ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಘಟನೆ ಸಂಭವಿಸಿದೆ.
ಬಣಕಲ್ ಬಳಿ ರಾಮಣ್ಣನ ಗಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ಹೊಳೆಗೆ ಬಿದ್ದಿವೆ. ಮತ್ತೊಂದು ಕಾರು ಚಕ್ಕಮಕ್ಕಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ.

ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಸಕಾಲದಲ್ಲಿ ರಕ್ಷಿಣೆಗೆ ಧಾವಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಸ್ಥಳೀಯ ಸಮಾಜ ಸೇವಕ ಆರೀಫ್ ಬಣಕಲ್ ಮತ್ತು ಬಣಕಲ್ ಗೆಳೆಯರ ಬಳಗದ ಯುವಕರು ಮತ್ತು ಸ್ಥಳೀಯರು ಕಾರುಗಳನ್ನು ಹೊಳೆಯಿಂದ ಮೇಲಕ್ಕೆತ್ತಿ ಕಾರಿನಲ್ಲಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.



