ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ಪಿ ಯತೀಶ್.ಎನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇಬ್ಬರನ್ನೂ ಏಕಕಾಲಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್.ಕೆ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ನಗರ ಹಾಗೂ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಒಂದು ತಿಂಗಳೊಳಗೆ ಮೂರು ದ್ವೇಷದ ಹತ್ಯೆ ನಡೆದಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರೋ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ.
ಜಿಲ್ಲೆಯ ಕೊಳತ್ತಮಜಲು ಎಂಬಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದ ರಹೀಂ ಹಾಗೂ ಕಲಂದರ್ ಮೇಲೆ, ಇಬ್ಬರು ದುಷ್ಕರ್ಮಿಗಳು ತಲ್ವಾರ್ನಿಂದ ದಾಳಿ ನಡೆಸಿದ್ದರು. ಈ ವೇಳೆ ರಹೀಂ ಸ್ಥಳದಲ್ಲೇ ಮೃತಪಟ್ಟಿದ್ದರು. ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರ ಹತ್ಯೆಯಾಗಿತ್ತು.



