ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಖಾಯಂ ನೌಕರರ ಸಂವಿಧಾನಾತ್ಮಕ ಸಾರ್ವತ್ರಿಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಚಿಕ್ಕಮಗಳೂರು ಅಜಾದ್ ವೃತ್ತದಲ್ಲಿ ವಸತಿ ಶಾಲೆಗಳ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಿತು.
ವಸತಿ ಶಾಲೆಗಳ ನೌಕರರ ಸಂಘದ ಜಿಲ್ಲಾಧ್ಯಕ್ಷೆ ದೀಪಾ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ಅಧೀನದಲ್ಲಿ ನಡೆಯುತ್ತಿರುವ ಎಸ್ಸಿ, ಎಸ್ಟಿ, ಓಬಿಸಿ ವಸತಿ ಶಾಲೆಗಳ ನಿರ್ವಹಣೆಗಾಗಿ ಕರ್ನಾಟಕ ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸಬೇಕು ಅಥವಾ ಕ್ರೈಸ್ ಅಧೀನದ ವಸತಿ ಶಾಲೆಗಳನ್ನು ಖಾಯಂ ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.
ಆರೋಗ್ಯ ಸಂಜೀವಿನಿ, ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಮರಣ ಮತ್ತು ನಿವೃತ್ತಿ ಉಪದಾನ ಯೋಜನೆಯನ್ನು ಕ್ರೈಸ್ ಖಾಯಂ ನೌಕರರಿಗೆ ವಿಸ್ತರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕಳೆದ 12 ವರ್ಷದಿಂದ ಕ್ರೈಸ್ ಸಂಸ್ಥೆ ಮೂಲಕ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಆದರೆ, ನಮ್ಮನ್ನು ಈವರೆಗೂ ಸರಕಾರಿ ನೌಕರರೆಂದು ಸರಕಾರ ಪರಿಗಣಿಸಿಲ್ಲ. ಸರಕಾರಿ ಶಾಲೆಗಳ ಶಿಕ್ಷಕರಂತೆ ನಾವೂ ಕೂಡ ವಸತಿ ಶಾಲೆಯಲ್ಲಿ ಉತ್ತಮ ಫಲಿತಾಂಶ ನೀಡಿದ್ದರೂ ನಮಗೆ ಮಲತಾಯಿ ಧೋರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ನಗದುರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ಶಿಕ್ಷಕ ನೌಕರರು ಮರಣ ಹೊಂದಿದರೆ 20 ಲಕ್ಷ ರೂ. ನೀಡಬೇಕು. ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡುವುದು, ಹೆಚ್ಚುವರಿ ಕಾರ್ಯಾಭಾರ ಇರುವುದರಿಂದ ಶೇ.10 ರಷ್ಟು ವಿಶೇಷ ಭತ್ಯೆ ಮಂಜೂರಾತಿ ಮಾಡುವಂತೆ ಒತ್ತಾಯಿಸಿದರು.
ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟು ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗಿದ್ದು, ಆದರೆ, ಸರಕಾರ ಯಾವುದೇ ಸ್ಪಂದನೆ ನೀಡದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗೆ ಬೇಡಿಕೆ ಬಗ್ಗೆ ಮನವಿ ಸಲ್ಲಿಸಿದ್ದು, ಇಂದಿನಿಂದ 3 ದಿನಗಳ ಕಾಲ ಅಜಾದ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದೇವೆ ಎಂದರು.
ಪ್ರತಿಭಟನೆಯಲ್ಲಿ ಸಂಘದ ಕಾರ್ಯದರ್ಶಿ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಧನರಾಜ್, ಜಗದೀಶ್, ಲಕ್ಷ್ಮಣ್, ರೇಖಾ, ಪ್ರಭುಕುಮಾರ್, ಲಿಂಗರಾಜು, ಜಿಲ್ಲೆಯ ಎಲ್ಲಾ ತಾಲ್ಲೂಕು ಸಂಘಟನೆಗಳ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.



