ಪರವಾನಿಗೆ ಇಲ್ಲದೆ ಅನಧೀಕೃತವಾಗಿ ರಸಗೊಬ್ಬರ ಮಾರಾಟ ಮಾಡುವುದು ಕಾನೂನು ಬಾಹಿರವೆಂದು ಚಿಕ್ಕಮಗಳೂರು ಕೃಷಿ ಇಲಾಖೆ ಉಪ ನಿರ್ದೇಶಕ ವೆಂಕಟೇಶ್ ಚವ್ಹಾಣ್ ಹೇಳಿದರು.
ಅವರು ಗುರುವಾರ ಮೂಡಿಗೆರೆ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತಾಲೂಕಿನಲ್ಲಿ 2025-26 ನೇ ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ಮಾತನಾಡಿದರು. ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಪೀಡೆನಾಶಕ ಅಗತ್ಯ ವಸ್ತುಗಳ ಕಾಯ್ದೆಯಡಿಯಲ್ಲಿ ಒಳಪಟ್ಟಿದೆ. ಕೃಷಿ ಪರಿಕರ ಮಾರಾಟ ಮಾಡುವ ಸಂದರ್ಭದಲ್ಲಿ ಅಂಗಡಿಯಲ್ಲಿ ಪರವಾನಿಗೆ ನಾಮಫಲಕ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶನ ಮಾಡಬೇಕು. ರೈತರು ರಸಗೊಬ್ಬರ ಹಾಗೂ ಇತರೆ ಕೃಷಿ ಪರಿಕರಗಳನ್ನು ಖರೀದಿಸುವಾಗ ಅಧಿಕೃತ ಬಿಲ್ಲುಗಳನ್ನು ನೀಡಬೇಕೆಂದು ಹೇಳಿದರು.
ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ತಿಮ್ಮನಗೌಡ ಪಾಟೀಲ್ ಅವರು, ರಸಗೊಬ್ಬರ ನಿಯಂತ್ರಣದ ಆದೇಶ, ಕೀಟನಾಶಕ ಹಾಗೂ ಬೀಜಗಳ ಅಧಿನಿಯಮದ ಕುರಿತು ಮಾಹಿತಿ ನೀಡಿದರು.
ಸಹಾಯಕ ಕೃಷಿ ನಿರ್ದೇಶಕಿ ಎಚ್.ಎನ್.ಸುಮ ಮಾತನಾಡಿ, ತಾಲೂಕಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆ ಬಿರುಸಿನಿಂದ ಪ್ರಾರಂಭಗೊಂಡಿದೆ. ರೈತರು ಕೇವಲ ಒಂದೇ ಗ್ರೇಡಿನ ರಸಗೊಬ್ಬರ ಬಳಸದೇ ಎನ್ಪಿಕೆ ಮಿಶ್ರಿತ ಕಾಂಪ್ಲೆಕ್ಸ್ ರಸಗೊಬ್ಬರ ಬಳಸಬೇಕು. ಎಲ್ಲಾ ಕೃಷಿ ಪರಿಕರ ಮಾರಾಟಗಾರರು ಪ್ರತಿ ತಿಂಗಳು ರಸಗೊಬ್ಬರದ ದಾಸ್ತಾನು ಬಗ್ಗೆ ಮಾಹಿತಿಯನ್ನು ನಮ್ಮ ಕಚೇರಿಗೆ ಕಡ್ಡಾಯವಾಗಿ ನೀಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಿನ ವಿವಿಧ ಕೃಷಿ ಪರಿಕರ ಮಾರಾಟಗಾರರು ಭಾಗವಹಿಸಿದ್ದರು.



