ಈ ಸಮಾಜ ಉತ್ತಮ ಸ್ಥಿತಿಯಲ್ಲಿ ಸಾಗಬೇಕೆಂದರೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವ ಮೂಲಕ ಪ್ರಜ್ಞಾವಂತರಾಗಬೇಕೆಂದು ಮೂಡಿಗೆರೆ ಜೆಎಂಎಫ್ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎ.ವಿಶ್ವನಾಥ್ ಹೇಳಿದರು.
ಅವರು ಶುಕ್ರವಾರ ಮೂಡಿಗೆರೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾನೂನು ಬಿಗಿಯಾಗಿದ್ದರೂ ಕೂಡ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ನಡೆಯುತ್ತಿರುವುದು ದುರಂತ. ಎಲ್ಲಾ ಮಕ್ಕಳಿಗೆ 18 ವರ್ಷದ ವರೆಗೆ ಕಡ್ಡಾಯವಾಗಿ ಶಿಕ್ಷಣ ಸಿಗುವಂತಾಗಬೇಕು. ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದು ಹಾಗೂ ಬಾಲ ಕಾರ್ಮಿಕರು ಕಂಡು ಬಂದರೆ ಕೂಡಲೇ ತಮ್ಮ ಶಿಕ್ಷಕರಿಗೆ ಹಾಗೂ 1098/112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದ ಅವರು, ಬಾಲ ಕಾರ್ಮಿಕ ತಡೆ ಬಗ್ಗೆ ವಿದ್ಯಾರ್ಥಿಗಳಿಗೆ ಬದ್ಧತಾ ಪ್ರಮಾಣವಚನ ಬೋಧಿಸಿದರು.
ಎಸ್ಡಿಎಂಸಿ ಅಧ್ಯಕ್ಷ ಎಂ.ಎಸ್.ಅನಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಲಸ ಮಾಡುವ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ಮಕ್ಕಳು ದೈಹಿಕ, ಬೌದ್ಧಿಕ ಹಾಗೂ ಮಾನಸಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುವುದಿಲ್ಲ. ಅಲ್ಲದೇ ತಮ್ಮ ಸಮುದಾಯಕ್ಕೆ ಕೊಡುಗೆ ನೀಡುವ ಸಾಮಥ್ರ್ಯದಿಂದ ದೂರ ಸರಿಯುತ್ತಾರೆ. ಇಂತಹ ಅನಿಷ್ಟ ಬಾಲ ಕಾರ್ಮಿಕ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಬಿಇಒ ಎನ್.ಎ.ಮೀನಾಕ್ಷಿ, ವಕೀಲ ರಿಜ್ವಾನ್ ಅಲಿ ಮಾತನಾಡಿದರು. ವಕೀಲರ ಸಂಘದ ಸಹ ಕಾರ್ಯದರ್ಶಿ ಕೆ.ಆರ್.ಹರ್ಷಾಂತ್, ಸಹಾಯಕ ಸರಕಾರಿ ಅಭಿಯೋಜಕಿ ಟಿ.ರೂಪಾ, ಕಾರ್ಮಿಕ ಇಲಾಖೆ ನಿರೀಕ್ಷಕ ಎಚ್.ಕೆ.ಪ್ರಭಾಕರ್, ಶಾಲೆ ಪ್ರಾಂಶುಪಾಲ ಎಂ.ಜಗದೀಶ್ನಾಯಕ್ ಮತ್ತಿತರರಿದ್ದರು.



