ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಹಿರೇಶಿಗರು ಗ್ರಾಮದಲ್ಲಿ ಪೆಟ್ರೋಲೆಟ್ ಕಂಪನಿಯ ಪೈಪ್ ಲೈನ್ ಗೆ ಕನ್ನ ಕೊರೆದು ಪೆಟ್ರೋಲ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಸಂಬಂಧ ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಸ್ಥಳೀಯ ಹಿರೇಶಿಗರ ಗ್ರಾಮದ ವಿಜಯ್ ಕುಮಾರ್ ಹಾಗೂ ಆತನ ಪುತ್ರ ಹರ್ಷ ಎಂಬುವರನ್ನು ಗೋಣಿಬೀಡು ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆಮರಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.
ಕಳ್ಳತನ ನಡೆದ ಸ್ಥಳದಲ್ಲಿ ಟಿಪ್ಪರ್ ಲಾರಿಯೊಳಗೆ ವಿಶೇಷವಾಗಿ ತಯಾರಿಸಲಾದ ಟ್ಯಾಂಕರ್ ಮೂಲಕ ಪೆಟ್ರೋಲ್ ಸಾಗಿಸಲಾಗುತ್ತಿದ್ದು, ಅದರಲ್ಲಿ ಸುಮಾರು 2,000 ಲೀಟರ್ ಪೆಟ್ರೋಲ್ ಪತ್ತೆಯಾಗಿತ್ತು. ಪೆಟ್ರೋಲೆಟ್ ಕಂಪನಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ಪೆಟ್ರೋಲೆಟ್ ಕಂಪನಿಯ ಮ್ಯಾನೇಜರ್ ಗೋಣಿಬೀಡು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಅದನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಈ ಗ್ಯಾಂಗ್ ಈ ಹಿಂದೆ 2011 ರಲ್ಲಿಯೂ ಇದೇ ರೀತಿಯ ಪೆಟ್ರೋಲ್ ಕಳ್ಳತನಕ್ಕೆ ಮಾಡಿದ್ದರು ಎಂದು ತಿಳಿದುಬಂದಿದೆ.
ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದು, ಈ ಕೃತ್ಯಕ್ಕೆ ಸಂಬಂಧಪಟ್ಟ ಇನ್ನಿತರ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಪೆಟ್ರೋಲ್ ಸಾಗಣೆಗಾಗಿ ಬಳಸಲಾಗಿದ್ದ ವಾಹನ ಹಾಗೂ ಪೆಟ್ರೋಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮೂಡಿಗೆರೆ ವೃತ್ತ ನಿರೀಕ್ಷಕ ಕೆಂ.ವಿ.ರಾಜಶೇಖರ್ ಅವರ ಮಾರ್ಗದರ್ಶನದಲ್ಲಿ ಗೋಣಿಬೀಡು ಠಾಣಾಧಿಕಾರಿ ಹರ್ಷವರ್ಧನ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶೀಘ್ರವಾಗಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ



