ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಈ ಹಿಂದ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ವ್ಯಕ್ತಿ ಮುಖಗವಸು ಹಾಕಿಕೊಂಡು ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದು, ನ್ಯಾಯಾದೀಶರು ವಿಚಾರಣೆಯನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ನೈರ್ಮಲ್ಯ ಉದ್ಯೋಗಿಯಾಗಿರುವ ವ್ಯಕ್ತಿಯೊಬ್ಬರು ಅತ್ಯಂತ ಆಘಾತಕಾರಿ ಘಟನೆಗಳನ್ನು ಬಹಿರಂಗಪಡಿಸಿದ್ದು, 1998 ರಿಂದ 2014 ರ ನಡುವೆ ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆಯಾದ ಶಾಲಾ ಬಾಲಕಿಯರು ಸೇರಿದಂತೆ ಹಲವು ಮಹಿಳೆಯರ ಶವಗಳನ್ನು ಬಲವಂತಕ್ಕೆ ಮಣಿದು ಸುಟ್ಟು ಮತ್ತು ಹೂತು ಹಾಕಿದ್ದೇನೆ ಎಂದು ದಕ್ಷಿಣ ಕನ್ನಡ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.
ಸುಮಾರು ಒಂದು ದಶಕದ ನಂತರ ಪಶ್ಚಾತ್ತಾಪದಿಂದ ಮತ್ತು ಅತ್ಯಾಚಾರ ಹಾಗೂ ಕೊಲೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ನಾನು ಮುಂದೆ ಬಂದಿದ್ದೇನೆ ಎಂದು ಆ ವ್ಯಕ್ತಿ ಹೇಳಿಕೊಂಡಿದ್ದಾರೆ
ಜುಲೈ 3 ರಂದು ಬಿಎನ್ಎಸ್ನ ಸೆಕ್ಷನ್ 211(ಎ) ಅಡಿಯಲ್ಲಿ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. “ಆ ವ್ಯಕ್ತಿ ತನ್ನ ಗುರುತನ್ನು ಬಹಿರಂಗಪಡಿಸದಂತೆ ವಿನಂತಿಸಿದ್ದಾರೆ ಮತ್ತು ನ್ಯಾಯಾಲಯದಿಂದ ಅಗತ್ಯ ಅನುಮತಿ ಪಡೆದ ನಂತರ, ನಾವು ಪ್ರಕರಣ ದಾಖಲಿಸಿದ್ದೇವೆ” ಎಂದು ದಕ್ಷಿಣ ಕನ್ನಡ ಎಸ್ಪಿ ತಿಳಿಸಿದ್ದರು.
ಮಾಹಿತಿ ನೀಡುವವರು ತಮಗೆ ಮತ್ತು ತಮ್ಮ ಕುಟುಂಬಕ್ಕೆ ರಕ್ಷಣೆ ಕೋರಿದ್ದಾರೆ. ಮಾಹಿತಿ ನೀಡುವವರನ್ನು ಪ್ರತಿನಿಧಿಸುತ್ತಿರುವ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶಪಾಂಡೆ ಅವರು ದೂರಿನ ವಿವರಗಳನ್ನು ಬಿಡುಗಡೆ ಮಾಡಿದ್ದರು.
ತನ್ನ ದೂರಿನ ಜೊತೆಗೆ, ತಾನು ಹೂತುಹಾಕಿದ ಶವಗಳ ಅವಶೇಷಗಳ ಛಾಯಾಚಿತ್ರಗಳನ್ನು ಮತ್ತು ಇತ್ತೀಚೆಗೆ ಹೊರತೆಗೆದ ಶವಗಳ ಛಾಯಾಚಿತ್ರಗಳನ್ನು ಪೊಲೀಸರಿಗೆ ಸಲ್ಲಿಸಿರುವುದಾಗಿ ಆ ವ್ಯಕ್ತಿ ಹೇಳಿಕೊಂಡಿದ್ದರು.



