ಅನಾಮಿಕ ವ್ಯಕ್ತಿಯನ್ನು ಬಳಸಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯದ ಪಾವಿತ್ರ್ಯತೆಗೆ ಕಳಂಕ ತರುತ್ತಿರುವ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬುಧವಾರ ಚಿಕ್ಕಮಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾದಿಗಳ ಹೆಸರಿನಲ್ಲಿ ಸಾವಿರಾರು ಜನ ಹನುಮಂತಪ್ಪ ವೃತ್ತದಿಂದ ಆಜಾದ್ ಮೈದಾನದವರೆಗೆ ಮೆರವಣಿಗೆ ನಡೆಸಿ ಹಕ್ಕೋತ್ತಾಯ ಮಂಡಿಸಿದರು.
ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ಎಂ ಡಿ, ಕುಡ್ಲ ರಾಂಪೇಜ್ ಅಜೇಯ ಅಂಚನ್, ಗಿರೀಶ್ ಮಟ್ಟಣ್ಣನವರ್, ಜಯಂತ ಟಿ. ಹಾಗೂ ಇವರ ಸಹಚರರ ಮೇಲೆ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನಾಡಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ॥ ಡಿ ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ನಿರಂತರವಾಗಿ ಸುಳ್ಳು ಆರೋಪ ಹೊರಿಸಿ ,ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುತ್ತಿದ್ದಾರೆ ಎಂದು ದೂರಿದರು.
ಇದರಿಂದ ಕ್ಷೇತ್ರದ ಭಕ್ತರ ಭಾವನೆಗಳಿಗೆ ನಿರಂತರವಾಗಿ ಧಕ್ಕೆ ಉಂಟಾಗುತ್ತಿದ್ದು ಸುಳ್ಳು ಸುದ್ದಿ ಹಬ್ಬಿಸಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡಿ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಅನಾಮಿಕ ವ್ಯಕ್ತಿ ನೀಡಿದ ದೂರಿನ ಆಧಾರದಲ್ಲಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ಅದರ ಮೂಲಕ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವುದನ್ನು ಶ್ರೀ ಕ್ಷೇತ್ರದ ಭಕ್ತರಾದ ನಾವು ಗೌರವದಿಂದ ಸ್ವಾಗತಿಸುತ್ತಿದ್ದೇವೆ ಎಂದಿದ್ದಾರೆ.
ಅಪ ಪ್ರಚಾರಗಳಿಗೆ ತೆರೆ ಬಿದ್ದು ಸತ್ಯ ಸಂಗತಿ ಹೊರ ಬರಬೇಕಾದರೆ ಉಲ್ಲೇಖಿತ ವ್ಯಕ್ತಿಗಳ ಮೇಲೆ ಸಮಗ್ರ ತನಿಖೆ ನಡೆಸಿ ಗಡಿಪಾರು ಮಾಡಬೇಕಾಗಿದೆ ಎಂದು ಒತ್ತಾಯಿಸಿದರು. ಮೆರವಣಿಗೆಯಲ್ಲಿ ಬಿಜೆಪಿ ಸೇರಿದಂತೆ ವಿವಿಧ ಪಕ್ಷ ಸಂಘಟನೆಗಳ ಮುಖಂಡರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.



