ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಃ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.
ಅವರು ಶನಿವಾರ ಚಿಕ್ಕಮಗಳೂರು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸಂಗಮೇಶ್ವರ ಪೇಟೆ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಸಲಾಗಿದ್ದ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾ ಯುಗದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಷ್ಟೇ ಮುಖ್ಯ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಮ್ಮ ವಿದ್ಯಾರ್ಥಿ ಜೀವನ ಸುವರ್ಣಾಕ್ಷರದಲ್ಲಿ ಬರೆದಿಡುವ ಸಮಯ ಇದಾಗಿದೆ ಎಂಬುದು ಮುಂದಿನ 10 ವರ್ಷಗಳಲ್ಲಿ ನಿಮಗೆ ತಿಳಿಯುತ್ತದೆ ಎಂದರು.
ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಕೇಂದ್ರೀಕರಿಸಿಕೊಂಡು ವ್ಯಸನ, ದುರಭ್ಯಾಸದ ಕಡೆಗೆ ವಾಲದೆ ಕೇವಲ ನಿಮ್ಮ ದೃಷ್ಟಿ ಶಿಕ್ಷಣ ಮತ್ತು ಕ್ರೀಡೆಗಳಲ್ಲಿ ಭಾಗವಹಿಸಿ ಯಶಸ್ಸು ಸಾಧಿಸಿದಾಗ ಉತ್ತಮ ಭವಿಷ್ಯವಾಗಿ ರೂಪುಗೊಳ್ಳುತ್ತದೆ ಎಂದು ಹೇಳಿದರು.
ಪ್ರಕೃತಿಯ ಮಡಿಲು ಜಿಲ್ಲೆಯ ಪ್ರವಾಸೋದ್ಯಮಕ್ಕೆ ದೇಶ, ರಾಜ್ಯದಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ರಾಷ್ಟ್ರಕವಿ ಕುವೆಂಪು, ಅಂಬಳೆ ಎ.ಆರ್ ಕೃಷ್ಣಶಾಸ್ತ್ರಿ ಇಂತಹ ಪ್ರಸಿದ್ದ ಸಾಹಿತಿಗಳು ಜನಿಸಿದ ಜಿಲ್ಲೆ ಎಂಬ ಹೆಗ್ಗಳಿಕೆ ಇದ್ದು, ಶಿಕ್ಷಣ ಪಡೆಯುತ್ತಿರುವ ನೀವುಗಳು ಸಹ ಮುಂದೆ ದೊಡ್ಡ ದೊಡ್ಡ ಸೇವೆ ಸಲ್ಲಿಸುವಂತಾಗಲಿ ಎಂದು ಹೇಳಿದರು.
ಹಿಂದೆ ಮಕ್ಕಳಿಗೆ ಗುರುಕುಲದಲ್ಲಿ ಶಿಕ್ಷಣ ನೀಡಲಾಗುತ್ತಿತ್ತು. ಹೊಳೆ, ನದಿ ದಂಡೆ ಮೇಲೆ, ಪರ್ವತಗಳ ಮೇಲೆ ಗುರುಕುಲಗಳು ಸುಂದರ ಪರಿಸರದಲ್ಲಿ ಶಿಕ್ಷಣ ನೀಡಲಾಗುತ್ತಿತ್ತು. ಇಂತಹ ಪ್ರಕೃತಿಗೆ ಹೆಸರುವಾಸಿಯಾದ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ನೀವೇ ಧನ್ಯರು ಎಂದರು.
ಮುಂದೆ ನೀವು ಸಂಸ್ಕಾರವಂತರಾಗಿ ಸಮಾಜಕ್ಕೆ ಮಾದರಿಯಾಗಬೇಕೆಂಬ ಉದ್ದೇಶದಿಂದ ನಗರದ ಶಾಲಾ-ಕಾಲೇಜುಗಳ ಸಮೀಪ ಮಾದಕ ದ್ರವ್ಯಗಳ ಮಾರಾಟಕ್ಕೆ ಕಡಿವಾಣ ಹಾಕುವುದರ ಜೊತೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸುಮಾರು 9 ಕೋಟಿ ರೂ ವೆಚ್ಚದಲ್ಲಿ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣವನ್ನು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಇನ್ನು ಎರಡು ವರ್ಷದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಜೊತೆಗೆ ಎಲ್ಲಾ ಸೌಲಭ್ಯವನ್ನು ಕಲ್ಪಿಸಿ ದಿನದ 24 ಗಂಟೆಗಳಲ್ಲಿಯೂ ಕ್ರೀಡಾಪಟುಗಳಿಗೆ ಅರ್ಪಿಸುವ ಗುರಿಹೊಂದಲಾಗಿದೆ ಎಂದ ಅವರು, ಅನುದಾನ ಮಂಜೂರಾಗಿದ್ದು, ತಾಂತ್ರಿಕ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದರು.
ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಮಂಜುನಾಥ್ ಮಾತನಾಡಿ, ಮಳೆಗಾಲದಲ್ಲಿ ಕ್ರೀಡಾಕೂಟಗಳು ನಡೆದರೆ ವಿದ್ಯಾರ್ಥಿಗಳು ಭಾಗವಹಿಸಲು ತೊಂದರೆಯಾಗುತ್ತಿರುವುದನ್ನು ಮನಗಂಡು ಮುಂದಿನ ದಿನಗಳಲ್ಲಿ ಮಳೆಗಾಲ ಮುಗಿದ ಬಳಿಕ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವಂತೆ ಕಿವಿಮಾತು ಹೇಳಿದರು.
ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ಮಕ್ಕಳು ಕ್ರೀಡಾ ಸ್ಪರ್ಧೆಗೆ ತರಬೇತಿ ಪಡೆದು ಸಿದ್ದರಾಗುವುದಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಕ್ರೀಡಾಕೂಟ ಆಯೋಜಕರು ಗಮನಹರಿಸಬೇಕೆಂದು ಮನವಿ ಮಾಡಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ. ಸೋಲು-ಗೆಲುವು ಸಹಜ. ಸೋತವರು ಬಾಗದೆ, ಗೆದ್ದವರು ಬೀಗದೆ ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲು ಗುರಿಹೊಂದುವಂತೆ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳ.ಕೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸುರೇಂದ್ರ ಉಪಸ್ಥಿತರಿದ್ದರು.ಪ್ರಾಂಶುಪಾಲರಾದ ಎಸ್.ವಿ ಮೇರುತುಂಗ ಸ್ವಾಗತಿಸಿ, ಉಪನ್ಯಾಸಕ ರಚನ್ ನಿರೂಪಿಸಿ, ರೀನಾ ವಂದಿಸಿದರು.



