ಮೂಡಿಗೆರೆ ತಾಲೂಕಿನ ದೇವರುಮನೆ ಪ್ರವಾಸಿ ತಾಣವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕಿ ನಯನಾ ಮೋಟಮ್ಮ ಅವರು ದೇವರುಮನೆ ಶ್ರೀ ಕಾಲಭೈರವೇಶ್ವರ ಕ್ಷೇತ್ರಕ್ಕೆ ಜಿ.ಪಂ. ಸಿಇಒ ಕೀರ್ತನಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ಕೀರ್ತನಾ ದೇವರಮನೆಯಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ, ಒಂದೇ ಕಡೆ ಅಂಗಡಿಗಳ ಸ್ಥಾಪನೆ, ಚಾರಣಕ್ಕಾಗಿ ತಡೆಗೋಡೆ ನಿರ್ಮಾಣ, ಟಿಕೇಟ್ ಕೌಂಟರ್ ಸೇರಿದಂತೆ ಪ್ರವಾಸೋಧ್ಯಮ ಅಭಿವೃದ್ಧಿ ಬಗ್ಗೆ ಬೇಕಾಗುವ ಅನುಕೂಲದ ಬಗ್ಗೆ ಶಾಸಕರ ಗಮನಕ್ಕೆ ತಂದರು. ನಂತರ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ದೇವಸ್ಥಾನ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ಬಳಿಕ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಈ ಪ್ರದೇಶದಲ್ಲಿ ಚಾರಣ ಮಾಡುವವರು, ದೇವಸ್ಥಾನಕ್ಕೆ ಬರುವವರಿಗೆ ಪ್ರತ್ಯೇಕ ವಾಹನದ ಪಾರ್ಕಿಂಗ್ ವ್ಯವಸ್ಥೆಯಾಗಬೇಕು. ಚಾರಣಕ್ಕೆ ಅಡಚಣೆಯಾಗದಂತೆ ಕೆಲ ಕಡೆ ತಡೆಗೋಡೆ ನಿರ್ಮಾಣವಾಗಬೇಕಿದೆ. ಇದಕ್ಕಾಗಿ ಪ್ರವಾಸೋಧ್ಯಮ ಇಲಾಖೆ, ಜಿ.ಪಂ, ತಾ.ಪಂ. ಸೇರಿದಂತೆ ವಿವಿಧ ಇಲಾಖೆಯಿಂದ ಹಣ ಕ್ರೂಡಿಕರಿಸಿ ಈ ಪ್ರದೇಶ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ. ಮುಖ್ಯವಾಗಿ ಪ್ರವಾಸಿಗರು ಪರಿಸರ ಹಾನಿ ಮಾಡದಂತೆ ಎಚ್ಚರ ವಹಿಸುವ ಕಾರ್ಯವಾಗಬೇಕು. ಇಲ್ಲಿನ ರಸ್ತೆ ಕಾಮಗಾರಿಗೆ ಅನುದಾನ ಮೀಸಲಿರಿಸಲಾಗಿದ್ದು, ಮಳೆಗಾಲ ಮುಗಿದ ಮೇಲೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ತಾ.ಪಂ. ಇಒ ದಯಾವತಿ ಸೇರಿದಂತೆ ಪ್ರವಾಸೋಧ್ಯಮ ಇಲಾಖೆಯ ಡಿಡಿ ಲೋಹಿತ್, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ದೇವಸ್ಥಾನ ಸಮಿತಿ ಸದಸ್ಯರು, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು, ಕಾಂಗ್ರೇಸ್ ಮುಖಂಡರು ಉಪಸ್ಥಿತರಿದ್ದರು.



