ಬೇಲೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೇಲೆ ಚಪ್ಪಲಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಹಾಸನದ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಭಾನುವಾರ ಈ ಘಟನೆ ನಡೆದಿತ್ತು. ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾಕಿರುವುದನ್ನು ನೋಡಿದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ನಡುವೆ ಮುಖ ಮುಚ್ಚಿಕೊಂಡ ಮಹಿಳೆಯೊಬ್ಬರು ಗಣೇಶನ ದೇವಸ್ಥಾನಕ್ಕೆ ಬಂದಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬೇಲೂರು ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇದೀಗ ಹಾಸನದ ವಿಜಯನಗರ ಬಡಾವಣೆ ನಿವಾಸಿ ಲೀಲಮ್ಮ ಎನ್ನುವ ಮಹಿಳೆಯನ್ನು ಬಂಧಿಸಲಾಗಿದೆ. ಹಾಸನದ ಗುಡ್ಡೇನಹಳ್ಳಿ ಬಳಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಬಾಣಾವರ ಪಿಎಸ್ಐ ಸುರೇಶ್, ಶೋಭಾ ನೇತೃತ್ವದ ತಂಡ ಮಹಿಳೆಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಮುಂದಾಗಿದೆ.
ನಿನ್ನೆ ಘಟನೆಯನ್ನು ಖಂಡಿಸಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು, ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಎಂಟು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿತ್ತು.
ಮಹಿಳೆಯ ಯಾವ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ. ಯಾರಾದರೂ ಪ್ರಚೋದನೆ ಮಾಡಿದ್ದಾರಾ ಅಥವಾ ಆಕೆಯ ಸ್ವಯಂ ಈ ಕೃತ್ಯ ಎಸಗಿದ್ದಾರಾ, ಮಹಿಳೆಯ ಹಿನ್ನಲೆ ಏನು ಎಂಬುದರ ಬಗ್ಗೆಯೆಲ್ಲ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ನಡುವೆ ಘಟನೆ ಖಂಡಿಸಿ ಇಂದು ಬೇಲೂರು ಪಟ್ಟಣ ಬಂದ್ ನಡೆಸಲು ಕರೆ ನೀಡಲಾಗಿದೆ.



