ಮೂಡಿಗೆರೆ ಪಟ್ಟಣದ ರೈತಭವನದ ಬಳಿ ನಡೆದ ಅಪಘಾತದಲ್ಲಿ ಆಟೋ ಚಾಲಕ ಮತ್ತು ದಲಿತ ಸಂಘರ್ಷ ಸಮಿತಿ ಹಾಗೂ ಬಿಎಸ್ಪಿ ಮುಖಂಡ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ರೈತ ಭವನ ಬಳಿ ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆಟೋ ಚಾಲಕ ಮಂಜುನಾಥ್ (56 ವರ್ಷ) ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಚಿಕ್ಕಮಗಳೂರು ಜಿಲ್ಲಾ ಸಮಿತಿ ಸದಸ್ಯರಾದ ಮಂಜುನಾಥ್ ಮೂಡಿಗೆರೆ ಸಮೀಪದ ಲೋಕವಳ್ಳಿ ಗ್ರಾಮದವರು. ಭಾನುವಾರ ಸಂಜೆ 6.30 ಗಂಟೆ ಸುಮಾರಿಗೆ ತಮ್ಮ ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ, ಎದುರಿನಿಂದ ಬರುತ್ತಿದ್ದ ಕಾರಿನೊಂದಿಗೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರವಾಗಿ ಗಾಯಗೊಂಡು ಮಂಜುನಾಥ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರಾದ ಮಂಜುನಾಥ್ ಅವರು ದಲಿತ ಸಂಘರ್ಷ ಸಮಿತಿ ಮತ್ತು ಬಿಎಸ್ಪಿಯಲ್ಲಿ ಸಕ್ರಿಯ ಸದಸ್ಯರಾಗಿದ್ದರು. ಮೂಡಿಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡುತ್ತಿದ್ದರು.
ಅವರ ನಿಧನಕ್ಕೆ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರು, ಬಿಎಸ್ಪಿ ಮುಖಂಡರು ಸೇರಿದಂತೆ ಹಲವಾರು ಗಣ್ಯರು, ಮುಖಂಡರು ಹಾಗೂ ಸ್ಥಳೀಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಆಪಾರ ಬಂದುಗಳನ್ನು ಅಗಲಿದ್ದಾರೆ..



