ಕನ್ನಡ ಭಾಷೆ ಮತ್ತು ಸಾಹಿತ್ಯ ಪರ್ವ ಕಾಲದಲ್ಲಿದೆ, ನಮ್ಮ ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿ ಪೋಷಿಸುವ ಜವಾಬ್ದಾರಿ ಎಲ್ಲರದ್ದಾಗಿದೆ ಎಂದು ಸಾಹಿತಿ, ಶಿಕ್ಷಕ ಮೇಕನಗದ್ದೆ ಲಕ್ಷ್ಮಣಗೌಡ ಹೇಳಿದರು.
ಅವರು ಸೋಮವಾರ ಮೂಡಿಗೆರೆ ತಾಲ್ಲೂಕಿನ ಅಡ್ಡಗುಡ್ಡೆ ಗ್ರಾಮದಲ್ಲಿ ಗೋಣಿಬೀಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕ, ಅಡ್ಡಗುಡ್ಡೆ, ಮೂಲರಹಳ್ಳಿ, ಗುತ್ತಿಹಳ್ಳಿ ಗ್ರಾಮಸ್ಥರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಹಳ್ಳಿ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಭಾಷೆ ಮತ್ತು ಸಾಹಿತ್ಯಕ್ಕೆ ಗ್ರಾಮೀಣ ಪ್ರದೇಶದ ಜನರ ಕೊಡುಗೆ ಅಪಾರವಾಗಿದೆ. ಆಧುನಿಕತೆಯ ಭರಾಟೆಗೆ ಸಿಲುಕಿ ನಮ್ಮ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ನಲುಗಿಹೋಗುತ್ತಿದೆ. ಭತ್ತ ಬೆಳೆಯುವುದನ್ನು ಬಹುತೇಕ ಕಡೆ ನಿಲ್ಲಿಸಲಾಗಿದೆ. ಇದರೊಂದಿಗೆ ನಮ್ಮ ಜಾನಪದ ಸೊಗಡಿನ ಹಾಡುಗಳು, ಪದಗಳು, ಪದ್ಧತಿಗಳು ನೇಪಥ್ಯಕ್ಕೆ ಸರಿದುಹೋಗಿವೆ. ನಮ್ಮ ಮಕ್ಕಳಿಗೆ ಇವ್ಯಾವುದರ ಪರಿಚಯವೇ ಆಗುತ್ತಿಲ್ಲ. ಸಹಬಾಳ್ವೆಯ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ಅವರು ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಮೂಡಿಗೆರೆ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಕೆ. ಲಕ್ಷ್ಮಣಗೌಡ ಮಾತನಾಡಿ ; ಗ್ರಾಮಾಂತರ ಪ್ರದೇಶದ ಜನರು ಒಂದೆಡೆ ಕಲೆತು ಸಂಭ್ರಮದಿಂದ ಕನ್ನಡ ಹಬ್ಬವನ್ನು ಆಚರಿಸುತ್ತಿರುವುದು ಅತ್ಯಂತ ಶ್ಲಾಘನೀಯ, ಯುವಜನರು ನಮ್ಮ ಭಾಷೆ ಸಾಹಿತ್ಯ ಬಗ್ಗೆ ಅಭಿಮಾನ ಆಸಕ್ತಿ ಬೆಳೆಸಿಕೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಣಿಬೀಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ನವೀನ್ ಆನೆದಿಬ್ಬ ವಹಿಸಿದ್ದರು. ವೇದಿಕೆಯಲ್ಲಿ ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಗೋಣಿಬೀಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಊರುಬಗೆ ಮತ್ತು ತ್ರಿಪುರ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಗ್ರಾಮದ ಹಿರಿಯರು, ಮುಖಂಡರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕವಿಗೋಷ್ಠಿ, ಆಶುಭಾಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಗ್ರಾಮದ ಹಿರಿಯರು ಮತ್ತು ಸಾಧಕರನ್ನು ಗುರುತಿಸಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಆಕರ್ಷಕ ಕನ್ನಡ ಮೆರವಣಿಗೆ ನೆರವೇರಿಸಲಾಯಿತು, ಗ್ರಾಮದ ಯುವಕರು, ಯುವತಿಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ತಮ್ಮ ಕನ್ನಡ ಅಭಿಮಾನವನ್ನು ತೋರ್ಪಡಿಸಿದರು.






