ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಜನಪ್ರಿಯ ಪ್ರವಾಸಿ ತಾಣವಾದ ರಾಣಿ ಝರಿ ವ್ಯೂ ಪಾಯಿಂಟ್ಗೆ ಅರಣ್ಯ ಇಲಾಖೆ ಟಿಕೆಟ್ ವ್ಯವಸ್ಥೆ ಜಾರಿಗೆ ತಂದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರ ವಿರೋಧಿಸಿ ಸ್ಥಳೀಯ ಗ್ರಾಮಸ್ಥರು ರಾಣಿ ಝರಿ ಬಳಿ ಭಾರಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಮಾಹಿತಿ ತಿಳಿದು ಉಪ ವಲಯ ಅರಣ್ಯಾಧಿಕಾರಿ ನಿಶ್ಚಿತ್ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಮೇಲಧಿಕಾರಿಗಳ ನಿರ್ದೇಶನದಂತೆ ಟಿಕೆಟ್ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು. ಆದರೆ ಗ್ರಾಮಸ್ಥರ ಆಕ್ಷೇಪಣೆ ಹಾಗೂ ಮನವಿಗಳನ್ನು ಮೇಲಧಿಕಾರಿಗಳಿಗೆ ವರದಿ ಮಾಡುವುದಾಗಿ ಭರವಸೆ ನೀಡಿದರು.
ಪ್ರತಿದಿನ ನೂರಾರು ಪ್ರವಾಸಿಗರು ಭೇಟಿ ನೀಡುವ ಈ ಪ್ರದೇಶದಲ್ಲಿ ಈಗಾಗಲೇ ಬಂಡಾಜೆ ಫಾಲ್ಸ್ಗೆ ತಲಾ 300 ರೂ. ಶುಲ್ಕ ವಿಧಿಸಲಾಗುತ್ತಿದೆ. ಇದರ ನಡುವೆ ರಾಣಿ ಝರಿ ವ್ಯೂ ಪಾಯಿಂಟ್ಗೂ ಟಿಕೆಟ್ ನಿಗದಿ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸುಂಕಸಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರ, “ರಾಣಿ ಝರಿ ನಮ್ಮ ಗ್ರಾಮದ ನೈಸರ್ಗಿಕ ಆಸ್ತಿ. ಜನರ ಅಭಿಪ್ರಾಯ ಕೇಳದೇ ತೆಗೆದುಕೊಂಡ ನಿರ್ಧಾರ ಸರಿಯಲ್ಲ” ಎಂದರು.
ಸಿಪಿಐ ಮುಖಂಡ ರವಿ, “ಪ್ರಕೃತಿಯನ್ನು ವ್ಯಾಪಾರೀಕರಣಗೊಳಿಸುವ ನೀತಿ ಜನವಿರೋಧಿಯಾಗಿದೆ” ಎಂದು ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿದರು.
ಈ ಪ್ರತಿಭಟನೆಯಲ್ಲಿ ಸುಂಕಸಾಲೆ, ದುರ್ಗದಹಳ್ಳಿ, ಮಧುಗುಂಡಿ ಹಾಗೂ ಬಲಿಗೆ ಗ್ರಾಮಗಳ 300ಕ್ಕೂ ಹೆಚ್ಚು ಗ್ರಾಮಸ್ಥರು ಭಾಗವಹಿಸಿದ್ದರು. ಟಿಕೆಟ್ ವ್ಯವಸ್ಥೆಯನ್ನು ಹಿಂಪಡೆಯದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.
ವರದಿ : ಸಂತೋಷ್ ಅತ್ತಿಗೆರೆ



