ಕಳಸ ಟ್ಟಣದಲ್ಲಿ ಭಾನುವಾರ ಬೃಹತ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನೆರವೇರಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಸಂಭ್ರಮ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
ಹಿಂದೂ ಸಮಾಜವು ಎದುರಿಸುತ್ತಿರುವ ಸವಾಲುಗಳಿಗೆ ಅಂತ್ಯಹಾಡಿ, ಸದೃಢ ಮತ್ತು ಸಾಮರಸ್ಯಪೂರ್ಣ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಹಿಂದೂ ಜನ ಜಾಗೃತಿಗಾಗಿ ಈ ಸಮಾಜೋತ್ಸವ ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಮಾಜೋತ್ಸವದ ಆಯೋಜನಾ ಸಮಿತಿಯವರು ತಿಳಿಸಿದರು.

ಭಾನುವಾರ ಮಧ್ಯಾಹ್ನ 3 ಗಂಟೆಗೆ ಕಳಸೇಶ್ವರ ದೇವಸ್ಥಾನದಿಂದ ಆರಂಭಿಸಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆಯಲ್ಲಿ ಆಕರ್ಷಕವಾದ ಕಲಾತಂಡಗಳು, ವಾದ್ಯಮೇಳಗಳೊಂದಿಗೆ ಸಾವಿರಾರು ಜನರು ಭಾಗವಹಿಸಿದ್ದರು. ಸಂಜೆ 5 ಗಂಟೆಗೆ ದುರ್ಗಾ ಮಂಟಪದಲ್ಲಿ ಸಾರ್ವಜನಿಕ ಸಭೆ ನಡೆಸಲಾಯಿತು
ಶಿವಮೊಗ್ಗದ ಸಾಮಾಜಿಕ ಕಾರ್ಯಕರ್ತ ಯಾದವಕೃಷ್ಣ ದಿಕ್ಸೂಚಿ ಭಾಷಣ ಮಾಡಿದರು. ಹೊರನಾಡಿನ ಜಿ.ಭೀಮೇಶ್ವರ ಜೋಷಿ, ಸಮಾಜೋತ್ಸವ ಆಯೋಜನ ಸಮಿತಿ ಅಧ್ಯಕ್ಷ ರಘುನಾಥ ಕೆಸುವಿನಹಕ್ಲು ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಸಂಸ್ಥೆಗಳ ಮುಖಂಡರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.



