ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 173, 206 ಮತ್ತು 169 ರ ರಸ್ತೆ ಅಭಿವೃದ್ಧಿ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ 173ರ ಮೂಡಿಗೆರೆ-ಮೂಗ್ತೀಹಳ್ಳಿಯ ಪ್ರಕ್ರಿಯೆ ನಿಧಾನ ಗತಿಯಲ್ಲಿ ನಡೆಯುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಅರ್ಹ ಗುತ್ತಿಗೆದಾರರಿಗೆ ಟೆಂಡರ್ ವಹಿಸಲು ಸಂಬಂಧಿಸಿದ ಆರ್.ಒ.ಗಳಿಗೆ ಸಲ್ಲಿಸಿ ಅನುಮೋದನೆ ಪಡೆದು ಕೆಲಸ ಆರಂಭಿಸಬೇಕು ಎಂದರು. ಈಗಾಗಲೇ ಈ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ವಶಪಡಿಸಿಕೊಳ್ಳಲಾದ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ 152 ಫಲಾನುಭವಿಗಳಲ್ಲಿ ಸೂಕ್ತ ದಾಖಲಾತಿಗಳನ್ನು ಸಲ್ಲಿಸಿರುವ ಕೇವಲ 55 ಮಂದಿಗೆ ನಿಗದಿಪಡಿಸಲಾದ ಪರಿಹಾರವನ್ನು ಕೋರ್ಟ್ನಲ್ಲಿ ಠೇವಣಿ ಇಟ್ಟು ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ ಎಂದ ಅವರು, ಉಳಿದ ಹೆಚ್ಚುವರಿ ಭೂಮಿಗೆ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಹೆದ್ದಾರಿ ಸಂಬಂಧ ಭೂಮಿಗೆ ಅರಣ್ಯ ತೀರುವಳಿ ಪ್ರಕ್ರಿಯೆ ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು. ಅರಣ್ಯ ತೀರುವಳಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದ ಅವರು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಅಧಿಕಾರಿಗಳು ಸರಿಯಾದ ರೀತಿಯಲ್ಲಿ ತೆರವುಗೊಳಿಸಲು ಪ್ರಯತ್ನಿಸಬೇಕು. ಭೂಸ್ವಾಧೀನ ಪರಿಹಾರ ವಿತರಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಿ ಅರ್ಹ ಫಲಾನುಭವಿಗಳಿಗೆ ನ್ಯಾಯಯುತ ಪರಿಹಾರ ನೀಡಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಪಟ್ಟಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ನಿವಾರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಉಪವಿಭಾಗಾಧಿಕಾರಿ ಬಿ.ಕೆ.ಸುದರ್ಶನ್, ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಮಂಜುನಾಥ್ ನಾಯಕ್, ವಿವಿಧ ಇಲಾಖೆಯ ಅಧಿಕಾರಿಗಳು, ಅರಣ್ಯ ಮತ್ತಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.



