ಜೀತ ಪದ್ಧತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಿದ್ದರೂ ಅಲ್ಲಲ್ಲಿ ಜೀತ ಪದ್ದತಿ ವರದಿಯಾಗುತ್ತಿದ್ದು, ಇದನ್ನು ಬುಡ ಸಹಿತ ಕಿತ್ತೊಗೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ , ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ನ್ಯಾಯಾಧೀಶರಾದ ಪ್ರಕಾಶ್ ಪಿ.ಎಂ. ಕರೆ ನೀಡಿದರು.
ಮೂಡಿಗೆರೆ ತಾಲ್ಲೂಕು ಕಾನೂನು ಸೇವಾ ಸಮಿತಿ , ವಕೀಲರ ಸಂಘ, ಅಭಿಯೋಜನಾ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಮುತಿಗೆ ಪುರ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುತ್ತಿಗೆಪುರದಲ್ಲಿ ಆಯೋಜಿಸಿದ್ದ ಜೀತಪದ್ಧತಿ ನಿರ್ಮೂಲನಾ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ಜೀತ ಪದ್ದತಿ ಈ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ. ಮನೆಯಲ್ಲಿ ಹಣಕಾಸಿನ ತೊಂದರೆಯಾದರೆ ಹಂವಂತರ ಬಳಿ ಹಣವನ್ನು ಪಡೆಯುತ್ತಿದ್ದರು. ಪಡೆದ ಹಣಕ್ಕೆ ಬಡ್ಡಿಯ ರೂಪದಲ್ಲಿ ಎಲ್ಲರೂ ಕೂಡ ಅವರ ಮನೆಯಲ್ಲಿ ಜೀತವನ್ನು ಮಾಡಬೇಕಿತ್ತು. ಜೀತ ಪದ್ಧತಿ ರದ್ದತಿ ಕಾಯ್ದೆಯನ್ನು 1976ರಲ್ಲಿ ದೇಶಾದ್ಯಂತ ಜಾರಿ ಮಾಡಲಾಗಿದೆ. ಜೀತ ಪದ್ಧತಿ ಎಲ್ಲಿದೆ ಎಂಬುದನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ನಿರ್ಮೂಲನೆ ಮಾಡಬೇಕು. ಇಂತಹ ಪ್ರಕರಣಗಳು ಕಂಡುಬಂದರೆ ಅಂಥವರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದರು. ನಂತರ ಮುತ್ತಿಗೆಪುರ ಸರ್ಕಾರಿ ಶಾಲೆಯ ಮಾದರಿ ಶಾಲೆಯಾಗಲು ಶ್ರಮಿಸಿದ ಧಾನಿಗಳು ಮತ್ತು ಎಸ್ ಡಿಎಂಸಿ ಸದಸ್ಯರು ಹಾಗೂ ಶಿಕ್ಷಕ ವೃಂದವನ್ನು ಅಭಿನಂದಿಸಿದರು.
ವಕೀಲರಾದ ಶ್ರೀಮತಿ ಕಾವೇರಿ ಎನ್.ಡಿ. ಉಪನ್ಯಾಸ ನೀಡುತ್ತಾ, ಯಾವುದೇ ಒಬ್ಬ ವ್ಯಕ್ತಿಗೆ ಅವನ ಇಚ್ಛೆಗೆ ವಿರುದ್ಧವಾಗಿ ಅವನನ್ನು ಕೂಡಿಹಾಕಿ ಕೆಲಸವನ್ನು ಮಾಡಿಸುತ್ತಾರೆ. ಅದು ನಮ್ಮ ಗಮನಕ್ಕೆ ಬಂದರೆ, ನಾವು ಕಾನೂನು ರೀತಿ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಇರಬೇಕು. ಜೀತ ಪದ್ಧತಿ ನಿರ್ಮೂಲನೆ ಕಾನೂನು ತಿಳಿದುಕೊಂಡು ಇಂತಹ ಘಟನೆಗಳು ಎಲ್ಲಿಯಾದರೂ ನಡೆದರೆ ಅದನ್ನು ಗುರುತಿಸಿ ಸಂಬಂಧ ಪಟ್ಟವರ ಗಮನಕ್ಕೆ ತರಬೇಕು. ಆಗ ಮಾತ್ರ ಕಾನೂನು ರೀತಿ ಕ್ರಮವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ತಂದೆ, ತಾಯಿ ಜೀತ ಪದ್ಧತಿ ಅಥವಾ ಜೀತದ ಕೆಲಸದಲ್ಲಿ ತೊಡಗಿದ್ದಲ್ಲಿ ಅವರ ಮಕ್ಕಳೂ ಕೂಡ ಆ ಕೆಲಸವನ್ನು ಮಾಡುತ್ತಾರೆ. ಈ ಜೀತಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಆಗಬೇಕೆಂಬುದು ಪ್ರತಿಯೊಬ್ಬರ ಧೈಯವಾಗಿದೆ. ಜೀತ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಬದ್ದರಾಗಿದ್ದಲ್ಲಿ ಮಾತ್ರ ಜೀತ ಪದ್ದತಿ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆ.ದೇವರಾಜ್ ಮಾತನಾಡಿ, ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ನೆಮ್ಮಲ್ಲರ ಜವಾಬ್ದಾರಿಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಿದೆ. ಸರ್ಕಾರ ಜನ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಹೇಳುವುದು ನಮ್ಮ ಕರ್ತವ್ಯ ಎಂದರು.
ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಕರಾದ ಶ್ರೀಮತಿ ಭಾರತಿ ಎಸ್ ವಹಿಸಿದ್ದರು, ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಸುಧೀರ್ ಹೆಚ್.ಎಂ., ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ರೇಣುಕಾ ಆರ್, ವಕೀಲರ ಸಂಘದ ಕಾರ್ಯದರ್ಶಿ ಎಂ.ಎಂ.ರಾಘವೇಂದ್ರ, ದೈಹಿಕ ಶಿಕ್ಷಕ ರಾದ ಸುರೇಶ್ ಡಿ.ಹೆಚ್.ಭಾಗವಹಿಸಿದ್ದರು,



