ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಯಾವುದೇ ಸಮಸ್ಯೆಯಾಗದಂತೆ ಹಾಗೂ ಅಗತ್ಯ ಔಷಧಿಗಳ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.
ಸೋಮವಾರ ಜಿಲ್ಲಾ ಆಸ್ಪತ್ರೆಯ ಹೊರ ರೋಗಿಗಳ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಔಷಧಿ ಉಗ್ರಾಣ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಸಮಸ್ಯೆಗಳು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇದೇ ವೇಳೆ ಜಿಲ್ಲಾ ಸರ್ಜನ್ ಡಾ.ಚಂದ್ರಶೇಖರ್ ಹೆಚ್.ಬಿ. ಮಾತನಾಡಿ, ಆಸ್ಪತೆಯಲ್ಲಿ ರೋಗಿಗಳಿಗೆ ದೈನಂದಿನ ತುರ್ತು ಚಿಕಿತ್ಸೆಗೆ ಬೇಕಿರುವ ಅಗತ್ಯ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದ್ದು, ಯಾವುದೇ ಕೊರತೆ ಕಾಡಿಲ್ಲ ಎಂದು ತಿಳಿಸಿದರು.
ನಾಯಿ ಕಡಿತ, ಹಾವು ಕಡಿತ, ವಿಷ ಸೇವನೆಯಂತಹ ಪ್ರಕರಣಗಳು ಬಂದಾಗ ಬೇಕಾಗಿರುವ ಎಲ್ಲಾ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿರುವ ಬಗ್ಗೆ ಕೂಡ ಜಿಲ್ಲಾಧಿಕಾರಿಗಳಿಗೆ ಅವರು ಮಾಹಿತಿ ನೀಡಿದರು. ಆಸ್ಪತ್ರೆಯ ಡಯಾಲಿಸಿಸ್ ವಿಭಾಗವು ಎಂದಿನಂತೆ ಕಾರ್ಯ ಪ್ರವೃತ್ತವಾಗಿದ್ದು, ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ ಎಂಬ ಅಂಶವನ್ನು ಕೂಡ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ ಬಾಬು ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅವಶ್ಯವಿರುವ ಔಷಧಿಗಳು ಲಭ್ಯವಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸರ್ಜನ್ ಡಾ.ಚಂದ್ರಶೇಖರ್ ಸಾಲಿಮಠ್ ಎಸ್. ಮತ್ತು ಆರ್ಸಿಹೆಚ್ ಅಧಿಕಾರಿಗಳಾದ ಡಾ.ಮಂಜುನಾಥ ಹೆಚ್.ಕೆ. ಹಾಜರಿದ್ದರು. ಉಳಿದಂತೆ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಕರ್ತವ್ಯದಲ್ಲಿದ್ದರು.



