ರಾಜ್ಯದಲ್ಲಿ ಕಾಂಗ್ರೆಸ್ ಲೋಪದೋಷಗಳನ್ನು ಮುಚ್ಚಿಡಲು ಸಚಿವ ಪ್ರಿಯಾಂಕ ಖರ್ಗೆ ಆರ್ಎಸ್ಎಸ್ ಗುರಿಯಾಗಿಸಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಎಂಬ ಕಾರಣಕ್ಕೆ ಎಂಎಲ್ಎ ಟಿಕೆಟ್ ಸಿಕ್ಕಿದೆ. ಅಧಿಕಾರದ ಅಹಂನಿಂದ ಪ್ರಿಯಾಂಕ ಖರ್ಗೆ ಅವರು ಆರ್ಎಸ್ಎಸ್ ಅನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಆರ್ಎಸ್ಎಸ್ ಬಗ್ಗೆ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಮಾತನಾಡುತ್ತಿದ್ದು, ದೇಶದ ಭದ್ರತೆ, ದೇಶವನ್ನು ಕಟ್ಟಲು, ಒಗ್ಗೂಡಿಸಲು ಮತ್ತು ದೇಶದ ಪರವಾಗಿ ಕೆಲಸ ಮಾಡಲು ಆರ್ಎಸ್ಎಸ್ ಹೇಳಿಕೊಡುತ್ತದೆ. ಜಾತಿ ಹೆಸರಿನಲ್ಲಿ ಕುತಂತ್ರ ರಾಜಕಾರಣ ಮಾಡಲು ಆರ್ಎಸ್ಎಸ್ ಹೇಳಿಕೊಡುವುದಿಲ್ಲ ಎಂದರು.
ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ ಖರ್ಗೆ ಅವರು ಬಹಳ ಎಚ್ಚರಿಕೆಯಿಂದ ಮಾತನಾಡಬೇಕು. ಇದೇ ಹೇಳಿಕೆಗಳನ್ನು ಮುಂದುವರೆಸಿದಲ್ಲಿ ಅವರ ವಿರುದ್ಧ ಉಗ್ರ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ಅತಿಯಾಗಿದ್ದು, ಯಲ್ಲಪ್ಪ ಎಂಬ ಕೂಲಿ ಕಾರ್ಮಿಕ ಆನೆ ದಾಳಿಯಿಂದ ಮೃತಪಟ್ಟಿದ್ದು, ಆನೆ ಸ್ಥಳಾಂತರ ಮಾಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆನೆ ದಾಳಿಯಿಂದ ಇನ್ನೆಷ್ಟು ಬಲಿ ಬೇಕು ಎಂಬುದು ಸರ್ಕಾರ ಕಾಯುತ್ತಿದೆ ಎಂದು ಪ್ರಶ್ನಿಸಿದರು.
ಜಿಲ್ಲೆಯ ಐದು ಜನ ಶಾಸಕರು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುಸಿಯುತ್ತಿದೆ. ಚುನಾವಣೆಯಲ್ಲಿ ಮತದಾರರಿಂದ ಮತ ಪಡೆದ ಐದು ಜನ ಶಾಸಕರು ಜನರ ಋಣವನ್ನು ತೀರಿಸುವ ಕೆಲಸವನ್ನು ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಬಿಜೆಪಿ ಪ್ರಯತ್ನ ಪಡಲಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳನ್ನು ನಿಯಂತ್ರಿಸಲು ಬಿಜೆಪಿ ಪಡೆಯನ್ನು ರಚನೆ ಮಾಡಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಜಾರಿಯಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಸರಿಯಾಗಿ ತಲುಪಬೇಕು. ಗ್ಯಾರಂಟಿ ಯೋಜನೆಯ ಹೆಸರನಲ್ಲಿ 5 ಸಾವಿರ ಕೋಟಿ ರೂಗಳು ಎಲ್ಲಿಗೆ ಹೋಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮುರಡಪ್ಪ, ಜಿಲ್ಲಾ ಉಪಾಧ್ಯಕ್ಷ ಈಶ್ವರಹಳ್ಳಿ ಮಹೇಶ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ನಗರ ಮಡಲ ಅಧ್ಯಕ್ಷ ಪುಷ್ಪರಾಜ್, ಮುಖಂಡರಾದ ಚಮಿನ್, ಕೋಟೆ ಪ್ರದೀಪ್ ಉಪಸ್ಥಿತರಿದ್ದರು.



