February 25, 2026

 

 

ವೀರಶೈವ ಮಹಾಮತ ಸಂಸ್ಥಾಪಕರಾದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಫೆಬ್ರುವರಿ 27ರಿಂದ ಮಾರ್ಚ 3ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ದಿನದ ಕಾರ್ಯಕ್ರಮಗಳು ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗಲಿದ್ದು ಫೆಬ್ರುವರಿ 27ರಂದು ಧ್ವಜಾರೋಹಣ ಹರಿದ್ರಾ ಲೇಪನದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. 28ರಂದು ಸಂಜೆ 6.30ಕ್ಕೆ ಧರ್ಮ ಮತ್ತು ಶಿಕ್ಷಣ ಕುರಿತ ಗೋಷ್ಠಿ ಜರುಗಲಿದ್ದು ರಾಜ್ಯದ ಅರಣ್ಯ ಸಚಿವರು ಹಾಗೂ ಅ.ಭಾ.ವೀರಶೈವ-ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಈಶ್ವರ ಖಂಡ್ರೆ ಸಮಾರಂಭವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಹೆಚ್.ಎಂ.ಲೋಕೇಶ್, ಯು.ಎಂ.ಬಸವರಾಜ, ಹೆಚ್.ಬಿ.ರಾಜಗೋಪಾಲ, ಸುಧೀರ, ಬಿ.ಜಗದೀಶ್ಚಂದ್ರ, ಕೋಕಿಲ ಲಿಂಗಪ್ಪಗೌಡ್ರು, ಮಹೇಶ ಆಚಾರ್ಯ, ಎಲ್.ರವಿ ಆಗಮಿಸುವರು.

ಮಾರ್ಚ 1ರಂದು ಬೆಳಿಗ್ಗೆ 10.30 ಗಂಟೆಗೆ ಶ್ರೀ ಜಗದ್ಗುರು ರಂಭಾಪುರಿ ಪೀಠದ ಪರಿಸರದಲ್ಲಿ 51 ಅಡಿ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂಗಲ ಮೂರ್ತಿ ಪ್ರತಿಷ್ಠಾಪನೆಯ ಶಿಲಾನ್ಯಾಸ ಭೂಮಿ ಪೂಜೆಯನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೆರವೇರಿಸುವರು. ಕೇಂದ್ರದ ಮತ್ತು ರಾಜ್ಯದ ಸಚಿವರು, ಸಂಸದರು, ಶಾಸಕರು ಉಪಸ್ಥಿತರಿರುವರು. ನಂತರ ಬೆಳಿಗ್ಗೆ 11 ಗಂಟೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಶಿವಾದ್ವೈತ ಸಮಾವೇಶ ನಡೆಯಲಿದ್ದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ, ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಷಿ ಇವರು ರಂಭಾಪುರಿ ಬೆಳಗು ಮಾಸಿಕ ಬಿಡುಗಡೆಗೊಳಿಸುವರು. ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜ್, ಇಂಧನ ಖಾತೆ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಮಂತ್ರಿ ಕೆ.ಜೆ. ಜಾರ್ಜ, ಹಾವೇರಿ ಕ್ಷೇತ್ರದ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸಂಸದರಾದ  ಕೋಟಾ ಶ್ರೀನಿವಾಸ್ ಪೂಜಾರಿ(ಉಡುಪಿ-ಚಿಕ್ಕಮಗಳೂರು), ಡಾ. ಪ್ರಭಾ ಮಲ್ಲಿಕಾರ್ಜುನ(ದಾವಣಗೆರೆ), ಶಾಸಕ ಹಾಗೂ ಬಿ.ಜೆ.ಪಿ.ರಾಜ್ಯ ಘಟಕದ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕ ಜಿ.ಎಚ್. ಶ್ರೀನಿವಾಸ್, ಮಾಜಿ ಸಚಿವ ಡಿ.ಎನ್. ಜೀವರಾಜ್, ಬೆಂಗಳೂರಿನ ಶಿವಶಂಕರಪ್ಪ ಸಾಹುಕಾರ್, ಹಾಸನದ ಸಿದ್ಧೇಶ್ ನಾಗೇಂದ್ರ, ಹುಬ್ಬಳ್ಳಿಯ ಬಸಯ್ಯ ಕಾಡಯ್ಯ ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪ್ರತಿಷ್ಠಿತ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಯನ್ನು ಸಾಹಿತ್ಯ ಸಂಶೋಧಕ ವಿಷಯ ತಜ್ಞರಾದ ಶಿಕ್ಯಾಗೋ ನಿವಾಸಿ ರವಿ ಹಂಜ ಇವರಿಗೆ ಪ್ರದಾನ ಮಾಡಲಾಗುವುದು. ಅ.ಭಾ.ವೀ.ಶಿವಾಚಾರ್ಯ ಸಂಸ್ಥೆ ಅಧ್ಯಕ್ಷರಾದ ಸಿಂದಗಿಯ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು, ಶಿವಗಂಗಾ ಕ್ಷೇತ್ರದ ಡಾ. ಮಲಯ ಶಾಂತಮುನಿ ಶಿವಾಚಾರ್ಯರು, ಸೂಡಿ ಜುಕ್ತಿ ಹಿರೇಮಠದ ಡಾ.ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು ಉಪಸ್ಥಿತರಿರುವರು. ಸಂಜೆ ಗದಗಿನ ಪಂ. ಡಾ|| ರಾಜಗುರು ಗುರುಸ್ವಾಮಿ ಕಲಕೇರಿ ಇವರಿಂದ ಸಂಗೀತ ಸೌರಭ ನಡೆಯಲಿದ್ದು ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು ಉದ್ಘಾಟಿಸುವರು. ಮಾಜಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ, ಕಾಂಗ್ರೆಸ್ ಧುರೀಣರಾದ ಶ್ರೀಮತಿ ಬಿ.ಸಿ. ಗೀತಾ ಯಡ್ರಾಮಿಯ, ಚಂದ್ರಶೇಖರ ಪುರಾಣಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿವಿಧ ಪ್ರಾಂತ ಪ್ರದೇಶಗಳ ಶಿವಾಚಾರ್ಯರು ಉಪಸ್ಥಿತರಿರುವರು.

ಮಾರ್ಚ 2ರಂದು ಸಂಜೆ ಧರ್ಮ ಮತ್ತು ಮಹಿಳೆ ಕುರಿತ ವಿಚಾರ ಗೋಷ್ಠಿ ನಡೆಯಲಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಅ.ಭಾ.ವೀ.ಲಿಂ.ಮಹಾಸಭಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷೆ ಚಂದ್ರಕಲಾ ಬಿ.ಕೆ. ಬೆಳ್ಳಾವರ, ಅ.ಭಾ.ವೀ.ಲಿಂ.ಮ.ಮಹಿಳಾ ರಾಜ್ಯ ಘಟಕದ ಉಪಾಧ್ಯಕ್ಷೆ ರಾಜೇಶ್ವರಿ ನಾಗರಾಜ್, ಆಲ್ದೂರಿನ ವನಮಾಲಾ ಮೃತ್ಯುಂಜಯ ಕೊಡ್ಲಿಪೇಟೆಯ ರಾಜೇಶ್ವರಿ ನಾಗರಾಜ್ ಹುಬ್ಬಳ್ಳಿ ಶ್ರೀ ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಇಂಧುಮತಿ ಮಾನ್ವಿ ಭಾಗವಹಿಸುವರು.

ಈ ಎಲ್ಲ ದಿನಗಳ ಸಮಾರಂಭಗಳಲ್ಲಿ ನಾಡಿನ ವಿವಿಧ ಮಠಾಧೀಶರು ಗಣ್ಯರು, ಕವಿ ಕಲಾವಿದರು ಪಾಲ್ಗೊಳ್ಳುವರು. ಫೆಬ್ರುವರಿ 27ರ  ಬೆಳಿಗ್ಗೆ ಶ್ರೀ ವೀರಭದ್ರೇಶ್ವರ ಗುಗ್ಗುಳ, 28ರಂದು ದೀಪೋತ್ಸವ ಕುಂಕುಮೋತ್ಸವ, ಶ್ರೀ ವೀರಭದ್ರಸ್ವಾಮಿ ಚಿಕ್ಕರಥೋತ್ಸವ, ಮಾರ್ಚ 1ರಂದು ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ, 2ರಂದು ಶಯನೋತ್ಸವ, ಶ್ರೀ ಜಗದ್ಗುರು ಶಿವಾನಂದ ಎಸ್ಟೇಟಿನಲ್ಲಿ ಪೂಜಾ-ಪ್ರಸಾದ, ಕೆಂಡಾರ್ಚನೆ ನಡೆಯುವುದು. 3ರಂದು ವಸಂತೋತ್ಸವ, ಭದ್ರಾ ನದಿ ತೀರದಲ್ಲಿ ಜರುಗುವ ಸುರಗಿ ಸಮಾರಾಧನೆಯೊಂದಿಗೆ ಜಾತ್ರಾ ಮಹೋತ್ಸವ ಮಂಗಲಗೊಳ್ಳುವುದು. ಮಾರ್ಚ 1ರಂದು ಪ್ರಾತ:ಕಾಲ ಶಿವದೀಕ್ಷಾ ಅಯ್ಯಾಚಾರ ನಡೆಯಲಿದ್ದು ಅಪೇಕ್ಷಿತರು 2 ದಿನ ಮುಂಚಿತವಾಗಿ ಹೆಸರನ್ನು ನೋಂದಾಯಿಸಬೇಕು. ಆಗಮಿಸುವ ಭಕ್ತಾದಿಗಳಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ರಾತ್ರಿ ಪ್ರಸಾದದ ವ್ಯವಸ್ಥೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ