ಆಲ್ದೂರು ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್ ಸೋಮೇಗೌಡ ಹೆಣ್ಣು ಮಕ್ಕಳಿಗೆ ಇರುವಂತಹ ಕಾನೂನು ಸೌಲಭ್ಯಗಳನ್ನು ತುರ್ತು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯ ಸಂಪರ್ಕವನ್ನು ಹೇಗೆ ಮಾಡಬಹುದೆಂಬ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚ ಅಧ್ಯಕ್ಷೆ ಪ್ರತಿಭಾ ನವೀನ್ ವಹಿಸಿದ್ದರು.
ಟೇಬಲ್ ಟೆನ್ನಿಸ್ ಬಾಲಕಿಯರ ವಿಭಾಗದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ ಆಲ್ದೂರು ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿನಿ ಮಾನಸ ರವರನ್ನು, ಇನ್ಸ್ಪೆಕ್ಟರ್ ಸೋಮೇಗೌಡರವರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷೆ ಜೆಸಿಂತಾ ಅನಿಲ್, ಜಿಲ್ಲಾ ಕಾರ್ಯದರ್ಶಿ ಚಂಪಾ ಜಗದೀಶ್,ಮಂಡಲ ಅಧ್ಯಕ್ಷ ರವಿ ಬಸರವಳ್ಳಿ, ಉಪಾಧ್ಯಕ್ಷೆ ಭವ್ಯ ನಟೇಶ್, ಪರಿಶಿಷ್ಟ ಜಾತಿ ಮೋರ್ಚಾದ ಅಧ್ಯಕ್ಷ ನಾಗೇಶ್,ಉಪಾಧ್ಯಕ್ಷೆ ದೀಪ, ಬಿಜೆಪಿ ಹೋಬಳಿ ಘಟಕದ ಅಧ್ಯಕ್ಷ ಭೂತನ ಕಾಡು ನಾಗೇಶ್, ಸಾರ್ವಜನಿಕರು ಭಾಗವಹಿಸಿದ್ದರು.



