ನಾವು ಬದುಕಿದ್ದೇವೆ, ಅನ್ಯಾಯದ ವಿರುದ್ಧ ಪ್ರತಿರೋಧಿಸುತ್ತೇವೆ, ಅದಕ್ಕೆ ಹೆಮ್ಮೆಯಿಂದ ನಡೆಯುತ್ತಿದ್ದೇವೆ ಎಂಬ ಶೀರ್ಷಿಕೆಯಡಿ ಕರ್ನಾಟಕ ಸ್ವಾಭಿಮಾನ ನಡಿಗೆ ಕಾರ್ಯಕ್ರಮವನ್ನು ಮಾ.11 ರಂದು ಹಮ್ಮಿಕೊಳ್ಳಲಾಗಿದೆ ಎಂದು ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆ ಮುಖಂಡ ಮೇಘ ಮಲ್ನಾಡ್ ಹೇಳಿದರು.
ಅವರು ಚಿಕ್ಕಮಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆಜಾದ್ ಪಾರ್ಕ್ನಿಂದ ನಡಿಗೆ ಆರಂಭವಾಗಿ ಬೋಳರಾಮೇಶ್ವರ ದೇವಸ್ಥಾನದ ಬಳಿಯಿರುವ ಸರ್ಕಾರಿ ನೌಕರರ ಭವನದಲ್ಲಿ ಮಧ್ಯಾಹ್ನ 12-30ಕ್ಕೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.
1969 ರಲ್ಲಿ ಅಮೇರಿಕಾದ ನ್ಯೂಯಾರ್ಕ್ ನಗರದ ಗ್ರೀನ್ವಿಚ್ ಪ್ರದೇಶದ ಸ್ಟೋನ್ವಾಲ್ ಇನ್ ಬಾರ್ ಮೇಲೆ ಪೊಲೀಸರು ದಾಳಿ ನಡೆಸಿದರು. ಪೊಲೀಸರ ನಿರಂತರ ಕಿರುಕುಳದಿಂದ ಬೇಸತ್ತ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರು ಆ ದಾಳಿಗೆ ಪ್ರಬಲವಾಗಿ ಪ್ರತಿರೋಧಿಸಿದ್ದು, ಈ ಘಟನೆಯನ್ನು ಸ್ಟೋನ್ವಾಳ್ ದಂಗೆ ಎಂದು ಪ್ರಸಿದ್ದಿ ಪಡೆಯಿತು ಎಂದು ಹೇಳಿದರು.
ಜಗತ್ತಿನಾದ್ಯಂತ ಆಧುನಿಕ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಚಳುವಳಿಯ ಆರಂಭವೆಂದು ಪರಿಗಣಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಸಮುದಾಯ ಮತ್ತು ಬೆಂಬಲಿಗರು ಸ್ವಾಭಿಮಾನ ಕಾರ್ಯಕ್ರಮಗಳನ್ನು ಆಯೋಜಿಸಿ ಮೆರವಣಿಗೆಗಳನ್ನು ನಡೆಸುತ್ತಿದ್ದು, ಚಿಕ್ಕಮಗಳೂರಿನಲ್ಲಿ ಎರಡನೇ ಬಾರಿ ಸ್ವಾಭಿಮಾನ ನಡಿಗೆಯನ್ನು ಆಯೋಜಿಸಲಾಗಿದೆ ಎಂದರು.
ಈ ಸಾಲಿನ ರಾಜ್ಯ ಬಜೆಟ್ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಯಾವುದೇ ಹೊಸ ಅನುದಾನ ಅಥವಾ ಸಮಗ್ರ ಕಾರ್ಯಕ್ರಮಗಳನ್ನು ಘೋಷಿಸದೇ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿರುವುದನ್ನು ಖಂಡಿಸಲಾಗುವುದು ಎಂದು ಹೇಳಿದರು.
ಫಾತಿಮತ್ ಮಾತನಾಡಿ, ಕರ್ನಾಟಕ ಲಿಂಗತ್ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು. ಸರ್ವತೋಮುಖ ಅಭಿವೃದ್ಧಿಗಾಗಿ ಕನಿಷ್ಠ 250 ಕೋಟಿ ಪ್ರತ್ಯೇಕ ಬಜೆಟ್ ನೀಡಬೇಕು. ವಸತಿ ಹಾಸ್ಟೇಲ್ ಮತ್ತು ಶಾರ್ಟ್ ಸ್ಟೇ ಹೋಮ್ಗಳನ್ನು ತಕ್ಷಣ ಒದಗಿಸುವಂತೆ ಒತ್ತಾಯಿಸಿದರು.
ಜೀವನೋಪಾಯ, ಆಹಾರ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಬೇಕು. ಪ್ರತಿ ವರ್ಷ ಕನಿಷ್ಠ 500 ಮನೆಗಳನ್ನು ಹಂಚಿಕೆ ಮಾಡಬೇಕು. ಕೃಷಿಯಲ್ಲಿ ಆಸಕ್ತಿ ಹೊಂದಿರುವ ಪ್ರತಿ ವ್ಯಕ್ತಿಗೆ 2 ಎಕರೆ ಕೃಷಿ ಯೋಗ್ಯ ಭೂಮಿಯನ್ನು ನೀಡಬೇಕು. ಗೋಮಾಳ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಹಂಚಿಕೆ ಮಾಡುವಂತೆ ಮನವಿ ಮಾಡಿದರು.
ಉದ್ಯಮಶೀಲತೆಗೆ ಬ್ಯಾಂಕ್ ಲಿಂಕ್ ಆಧಾರಿತ ಯೋಜನೆ ಜಾರಿಗೆ ತಂದು ಪ್ರತಿ ವ್ಯಕ್ತಿಗೆ 2 ಲಕ್ಷ ಸಬ್ಸಿಡಿ ನೀಡಬೇಕು. ಸ್ವಸಹಾಯ ಗುಂಪುಗಳನ್ನು ರಚಿಸಲು ಮತ್ತು ಬಲಪಡಿಸಲು ಸಮುದಾಯ/ಸರ್ಕಾರೇತರ ಸಂಸ್ಥೆಗಳಿಗೆ ಅನುದಾನ ನೀಡಬೇಕು. ಬಡ್ಡಿರಹಿತ ಸಾಲ ಒದಗಿಸಬೇಕು. ಮೈತ್ರಿ ಪಿಂಚಣಿಯನ್ನು ತಿಂಗಳಿಗೆ 2 ಸಾವಿರಕ್ಕೆ ಹೆಚ್ಚಿಸಬೇಕೆಂದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ತಿಂಗಳಿಗೆ 5 ಸಾವಿರ ವೃದ್ಧಾಪ್ಯ ಪಿಂಚಣಿ ನೀಡಬೇಕು. ಶೇ.1 ಮೀಸಲಾತಿಯನ್ನು ಕೇವಲ ಘೋಷಣೆಯಾಗಿ ಉಳಿಸದೆ, ಸರ್ಕಾರಿ ಉದ್ಯೋಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಮತ್ತು ಕೋಚಿಂಗ್ ನೀಡಬೇಕು. ಪ್ರತಿಯೊಂದು ಜಿಲ್ಲೆಯಲ್ಲಿ ಲಿಂಗತ್ವ ಮತ್ತು ಅಲ್ಪಸಂಖ್ಯಾತರಿಗಾಗಿ ಕನಿಷ್ಠ ಒಂದು ವಿಶೇಷ ಆರೋಗ್ಯ ಕೇಂದ್ರ ತೆರೆಯುವಂತೆ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್, ಪ್ರೀತಂ, ಆದಿಲ್ ಮತ್ತಿತರಿದ್ದರು.



