ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯತಿ ಬಳಿ ಇರುವ ಕೈಗಾರಿಕಾ ವಸಾಹತು ಪ್ರದೇಶಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಚೇಂಬರ್ ಆಫ್ ಕಾಮರ್ಸ್) ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರನ್ನು ಮಂಗಳವಾರ ಭೇಟಿ ಮಾಡಿದ ಸಂಸ್ಥೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಕಳೆದ 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕಾ ವಸಾಹತು ಪ್ರದೇಶ ಕುಡಿಯುವ ನೀರು, ಡ್ರೈನೇಜ್ ಅವ್ಯವಸ್ಥೆ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿ ನಲುಗುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ, ಒಳಚರಂಡಿ ವ್ಯವಸ್ಥೆ ಸರಿ ಇಲ್ಲದೆ ಮಳೆಗಾಲದಲ್ಲಿ ಚರಂಡಿಯ ನೀರು ರಸ್ತೆಯ ಮೇಲೆ ಹರಿಯುತ್ತದೆ, ಸೂಕ್ತವಾದ ಭದ್ರತಾ ವ್ಯವಸ್ಥೆ ಇಲ್ಲದೆ, ಭದ್ರತಾ ಸಿಬ್ಬಂದಿಗಳಿಲ್ಲದೆ ಆ ಪ್ರದೇಶ ಕುಡುಕರು ಮತ್ತು ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಆರೋಪಿಸಲಾಗಿದೆ.
ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ, ನಗರಸಭೆಯ ಸಿಬ್ಬಂದಿಗಳು ಅತ್ತ ತಿರುಗಿ ನೋಡದ ಕಾರಣ ವಸಾಹತು ಪ್ರದೇಶ ಕಸದ ಕೊಂಪೆಯಂತಾಗಿದೆ, ಸರ್ಕಾರದಿಂದ ಅಲ್ಲಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳು ಹರಾಜಿನ ದರ ಅತ್ಯಧಿಕವಾದ ಕಾರಣ ಹಲವು ವರ್ಷಗಳಿಂದ ಖಾಲಿ ಬಿದ್ದಿದ್ದು ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದಂತಾಗಿವೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಕೈಗಾರಿಕೆಗಳಿಗೆ ಅತ್ಯಗತ್ಯವಾಗಿ ಬೇಕಾದ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು, ಡ್ರೈನೇಜ್ ವ್ಯವಸ್ಥೆಯನ್ನು ಸರಿಪಡಿಸಬೇಕು, ಭದ್ರತಾ ಸಿಬ್ಬಂದಿಗಳನ್ನು ನೇಮಿಸಬೇಕು, ನಗರಸಭೆ ಸಿಬ್ಬಂದಿ ಪ್ರತಿದಿನ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸುವಂತೆ ಸೂಚಿಸಬೇಕು, ಕೈಗಾರಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಖಾಲಿ ಬಿದ್ದಿರುವ ಮಳಿಗೆಗಳ ಹರಾಜಿನ ದರವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.
ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಆರ್.ಎಂ. ಮಹೇಶ್, ಮಾಜಿ ಅಧ್ಯಕ್ಷ ಎಂ.ಶಾಂತರಾಮ್ ಹೆಗ್ಗಡೆ, ನಿರ್ದೇಶಕ ಸಿ.ಎಲ್. ಶ್ರೀಕಾಂತ್ ಹಾಜರಿದ್ದರು.



