ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿ ಮರಗುಂದ ಗ್ರಾಮದ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇವಸ್ಥಾನ ಪ್ರಾಂಗಣದಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆ ಹಿನ್ನೆಲೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರ ಅಹವಾಲು ಆಲಿಸಿದ ಅವರು, ಪ್ರವಾಸೋದ್ಯಮದ ಹೆಸರಿನಲ್ಲಿ ಬರುವ ಕೆಲ ಪ್ರವಾಸಿಗರ ಬೇಜವಾಬ್ದಾರಿತನ ಮತ್ತು ಸ್ಥಳೀಯ ಸಂಸ್ಕೃತಿಗೆ ಧಕ್ಕೆ ತರುವ ವರ್ತನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು
ಹಾಗೂ ಸಕಲೇಶಪುರ ಪಶ್ಚಿಮಘಟ್ಟ ಪ್ರವಾಸಿಗರ ನೆಚ್ಚಿನ ತಾಣವಾಗಿದ್ದು, ಇಲ್ಲಿನ ನೈಸರ್ಗಿಕ ಸೌಂದರ್ಯ ಮತ್ತು ಧಾರ್ಮಿಕ ಕೇಂದ್ರಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ಹೇಳಿದರು.
ಇತ್ತೀಚೆಗೆ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿಗಳು, ಕವರ್ ಗಳು, ಮದ್ಯದ ಬಾಟಲಿಗಳನ್ನು ಎಸೆಯುವ ಮೂಲಕ ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದಾರೆ. ವಿದೇಶಗಳಲ್ಲಿ ನಿಯಮ ಪಾಲಿಸುವವರು ಇಲ್ಲಿ ನಿರ್ಲಕ್ಷ್ಯ ತೋರಿಸುತ್ತಿರುವುದು ವಿಷಾದನೀಯ ಎಂದರು.

ದೇವಸ್ಥಾನದ ಪಾವಿತ್ರತೆ ಕಾಪಾಡಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಭರವಸೆ ನೀಡಿದರು.
ಗ್ರಾಮಸ್ಥರ ಬೇಡಿಕೆ ಮೇರೆಗೆ ಮರುಗುಂದ ಗ್ರಾಮದ ಗಡಿಯಲ್ಲಿ ಶೌಚಾಲಯ ನಿರ್ಮಾಣ, ಸಿಸಿಟಿವಿ ಅಳವಡಿಕೆ ಹಾಗೂ ಪ್ರವಾಸಿಗರಿಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಈ ಪವಿತ್ರ ತಾಣದ ಸಂರಕ್ಷಣೆಗೆ ಜಿಲ್ಲಾಡಳಿತ ಬದ್ದವಾಗಿದೆ ಎಂದು ಪುನರುಚ್ಚರಿಸಿದರು.
ಈ ವೇಳೆ ಮಾತನಾಡಿದ ಸಕಲೇಶಪುರ ಮಾಜಿ ಶಾಸಕ ಹೆಚ್.ಎಂ. ವಿಶ್ವನಾಥ್, ದೇವಸ್ಥಾನದ ಜೀರ್ಣೋದ್ಧಾರ ಮತ್ತು ರಸ್ತೆ ಕಾಮಗಾರಿಗಳ ಸಂಬಂಧ ಗ್ರಾಮಸ್ಥರು ಹಿಂದೆಯೇ ಹೋರಾಟ ನಡೆಸಿದ ಇತಿಹಾಸವಿದೆ. ಇದೀಗ ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಸ್ಥಳೀಯರು ತಿಳಿಹೇಳಿದ್ದನ್ನು ಕಿವಿಗೊಡೆದೇ ಪ್ರಚೋಧನಾಕಾರಿಯಾಗಿ ಮಾತನಾಡಿದ ಪೋಟೋಗ್ರಾಪರ್ ಜೊತೆಗೆ ನಡೆದ ಸಂಘರ್ಷವನ್ನು ತಿರುಚಿ ವೈಭವೀಕರಿಸಲಾಗುತ್ತಿದೆ. ಇದು ಧಾರ್ಮಿಕ ಸ್ಥಳವಾಗಿದ್ದು, ಶೋಕಿ ಮಾಡಲು ಬರುವವರು ಇಲ್ಲಿನ ಪಾವಿತ್ರ್ಯತೆಗೆ ದಕ್ಕೆ ತರುತ್ತಿದ್ದಾರೆ. ಈ ಬಗ್ಗೆ ಕಠಿಣ ನಿಯಮ ರೂಪಿಸಿ ದೇವಾಲಯದ ಪ್ರಶಾಂತತೆ ಮತ್ತು ಪಾವಿತ್ರ್ಯತೆ ಕಾಪಾಡಬೇಕು ಎಂದರು.
ಈ ಸಂದರ್ಭದಲ್ಲಿ ಸ್ಥಳೀಯರ ಪರವಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು. ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಶಾಂತ್ ಹಾಗೂ ರಕ್ಷಯ್ ಅವರ ಕುಟುಂಬ ವರ್ಗದವರು ಉಪಸ್ಥಿತರಿದ್ದು, ಜಿಲ್ಲಾಧಿಕಾರಿಗಳಿಗೆ ತಮ್ಮ ಅಹವಾಲು ಸಲ್ಲಿಸಿದರು. ಮರಗುಂದ ಹಾಗೂ ಸುತ್ತಮುತ್ತಲ ನೂರಾರು ಜನರು ಈ ಸಂದರ್ಭದಲ್ಲಿ ನೆರೆದಿದ್ದರು.



