ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಹಾಗೂ ಆದರ್ಶವನ್ನು ಯುವ ಜನತೆಗೆ ತಿಳಿಸುವ ಸಲುವಾಗಿ ಬಿಜೆಪಿ ಎಸ್ಸೀ ಮೋರ್ಚ ವತಿಯಿಂದ ಮೇ.29ರಂದು ಮಧ್ಯಾಹ್ನ 2 ಗಂಟೆಗೆ ಪಟ್ಟಣ ಬಿಜೆಪಿ ಕಚೇರಿಯಲ್ಲಿ 135ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಹೇಳಿದರು.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅಂಬೇಡ್ಕರ್ ಅವರ ಜನ್ಮ ಸ್ಥಳ ಸೇರಿದಂತೆ 5 ಸ್ಥಳವನ್ನು ಕೋಟ್ಯಾಂತರ ರೂ ವೆಚ್ಚ ಮಾಡಿ ಅಭಿವೃದ್ಧಿಪಡಿಸಲಾಗಿದೆ ಎಂದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಈ ಕಾರಣದಿಂದ ಏ.14ರಂದು ವಿಶ್ವ ಜ್ಞಾನದ ದಿನವೆಂದು ವಿಶ್ವದಾಧ್ಯಂತ ಆಚರಿಸಲಾಗುತ್ತಿದೆ. ಅಂತಹ ಮಹಾನ್ ವ್ಯಕ್ತಿಯ ಜೀವನ ಚರಿತ್ರೆ ಹಾಗೂ ಆಶಯವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಎಲ್ಲಾ ಸಮುದಾಯದ ಜನರಿಗೆ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಬಿಜೆಪಿ ಎಸ್ಸೀ ಮೋರ್ಚದ ಅಧ್ಯಕ್ಷ ಸಚಿನ್ ಮಾತನಾಡಿ, ಕಾರ್ಯಕ್ರಮಕ್ಕೆ ರಾಜ್ಯ ಉಪಾಧ್ಯಕ್ಷ, ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಮತ್ತು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ಶೆಟ್ಟಿ ಅವರು ಅಂಬೇಡ್ಕರ್ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ಶೆಟ್ಟಿ, ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಸೇರಿದಂತೆ ಪಕ್ಷದ ಎಲ್ಲಾ ಮೋರ್ಚದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆಂದು ಹೇಳಿದರು.
ತಾಲೂಕು ಎಸ್ಸೀ ಮೋರ್ಚ ಉಪಾಧ್ಯಕ್ಷ ಶರತ್ ಮಾಕೋನಹಳ್ಳಿ, ಬಾಳೂರು ಹೋಬಳಿ ಅಧ್ಯಕ್ಷ ರಘುಪತಿ, ನಗರ ಕಾರ್ಯದರ್ಶಿ ರಘು ಮೂಡಿಗೆರೆ ಉಪಸ್ಥಿತರಿದ್ದರು.



