ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ ಪ್ರೀತಿಯ ಸ್ವಾಗತ ನೀಡಲಾಯಿತು.
ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಇಂದು ಆಗಮಿಸಿದ ವಿದ್ಯಾರ್ಥಿಗಳಿಗೆ ಶಾಸಕರಾದ ಹೆಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ ಶಾಲೆಗೆ ಭೇಟಿ ನೀಡಿ, ಪ್ರತೀ ವಿದ್ಯಾರ್ಥಿಗಳಿಗೂ ಸಿಹಿ ಹಾಗೂ ಗುಲಾಬಿ ಹೂವನ್ನು ಹಂಚುವ ಮೂಲಕ ಬರಮಾಡಿಕೊಂಡರು.
ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ಮೂಲಭೂತ ಸೌಲಭ್ಯಗಳಿದ್ದು, ನುರಿತ ಶಿಕ್ಷಕರಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ದೊರಕಲಿದ್ದು, ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ದೃಷ್ಟಿಯಿಂದ ಸರ್ಕಾರ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಉತ್ತಮ ಫಲಿತಾಂಶ ಬರುತ್ತಿದೆ ಎಂದರು.
ಪೋಷಕರಲ್ಲಿ ತಮ್ಮ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆಂಬ ಕೀಳರಿಮೆ ಕಿಂಚಿತ್ತೂ ಬರಬಾರದು. ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸ ಮಾಡಿದವರೇ ಇಂದು ಉನ್ನತ ಹುದ್ದೆಗಳಲ್ಲಿ ಇರುವುದನ್ನು ಕಾಣುತ್ತಿದ್ದೇವೆ. ಉದಾಹರಣೆಗೆ ಎಂಎಲ್ಸಿ ಎಸ್.ಎಲ್.ಭೋಜೇಗೌಡ ಅವರು ಸರ್ಕಾರಿ ಶಾಲೆಗಳಲ್ಲೇ ಓದಿ ವಿಧಾನ ಪರಿಷತ್ ಸದಸ್ಯರಾಗಿರುವುದಲ್ಲದೆ, ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಓದಿ ಇಂದು ಶಾಸಕನಾಗಿದ್ದೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಶಾಲೆ ಪ್ರಾರಂಭವಾಗುವ ದಿನಗಳಲ್ಲಿ ಪ್ರತೀ ವರ್ಷ ಮಕ್ಕಳನ್ನು ಸ್ವಾಗತಿಸಲು ಒಂದೊಂದು ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುತ್ತೇವೆ, ಈ ಬಾರಿ ಬಸವನಹಳ್ಳಿ ಶಾಲೆಯನ್ನು ಆಯ್ಕೆ ಮಾಡಿಕೊಂಡಿದ್ದು, ಶಿಕ್ಷಕರು ಕೂಡ ಅಷ್ಟೇ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಮಕ್ಕಳಲ್ಲಿ ಕಲಿಯುವ ಆಸಕ್ತಿ ಇರಬೇಕು. ಆ ಕಾರಣದಿಂದ ಪ್ರೋತ್ಸಾಹ ತುಂಬುವುದು ಇದರ ಉದ್ದೇಶವಾಗಿದೆ ಎಂದರು.
ತಾವು ಶಿಕ್ಷಣದಿಂದ ವಂಚಿತರಾಗಿದ್ದು, ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಮಹತ್ವದ ಅಭಿಲಾಷೆ ಪೆಷಕರದು. ಅಲ್ಲದೆ, ಶಾಲೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವುದು ಕೂಡ ನಾವು ಜನಪ್ರತಿನಿಧಿಗಳು ಭೇಟಿ ನೀಡಿರುವ ಉದ್ದೇಶವಾಗಿದೆ ಎಂದ ಅವರು, ಸರ್ಕಾರಿ ಶಾಲೆಗಳಲ್ಲಿ ಉತ್ತಮವಾದ ಫಲಿತಾಂಶ ಬಂದಿದೆ. ಕೊರತೆ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬಿ ಇನ್ನಷ್ಟು ಗುಣಮಟ್ಟದ ಶಿಕ್ಷಣವನ್ನು ನೀಡುವ ವ್ಯವಸ್ಥೆ ಆಗಬೇಕಿದೆ ಎಂದರು.
ಶಾಲಾಭಿವೃದ್ಧಿ ಮಂಡಳಿಯ ಅಧ್ಯಕ್ಷ, ಮಾಜಿ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ಹಾಗೂ ಶಾಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



