ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ (ರಿ) ಮೂಡಿಗೆರೆ ತಾಲ್ಲೂಕು ಘಟಕ ಹಾಗೂ ಜಿಲ್ಲಾ ಹಳ್ಳಿಕಾರ್ ಒಕ್ಕಲಿಗ ಸಂಘದ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಹಾಗೂ 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಭಾನುವಾರ ಬಣಕಲ್ನ ಜೆ.ಸಿ. ಹಾಲ್ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ಎಲ್. ರವಿ ಗೌಡ (ಕೂಡಹಳ್ಳಿ) ಅವರು, “ಕೆಂಪೇಗೌಡರ ದೂರದರ್ಶಿತ್ವ, ಜನಪರ ಆಡಳಿತ ಹಾಗೂ ಅಭಿವೃದ್ಧಿ ಪರ ಚಿಂತನೆ ಇಂದಿನ ಪೀಳಿಗೆಗೆ ಆದರ್ಶವಾಗಿದೆ. ಯುವಜನತೆ ಶಿಕ್ಷಣ ಮತ್ತು ಸಂಸ್ಕಾರದೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬರಬೇಕು” ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳು ಮಾತನಾಡಿ, ಒಕ್ಕೂಟವು ಆಯೋಜಿಸುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಸಮಾಜದ ಹಾಗೂ ನಾಡಿನ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರದೊಂದಿಗೆ “ಪ್ರತಿಭಾ ಪುರಸ್ಕಾರ” ನೀಡಿ ಗೌರವಿಸಲಾಯಿತು.
ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಋತ್ವಿಕ್ ಗೌಡ (ಅಂಗಡಿ) ಅವರು ಮಾತನಾಡಿ, ಕೆಂಪೇಗೌಡರ ನಗರ ನಿರ್ಮಾಣದ ದೂರದೃಷ್ಟಿ, ಅವರ ಜೀವನ ಸಾಧನೆ ಹಾಗೂ ಸೊಸೆ ಲಕ್ಷ್ಮಿದೇವಿಯ ತ್ಯಾಗದ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ರಮೇಶ್ ಗೌಡ (ಹೊನ್ನೆಗಂಡಿ) ಮಾತನಾಡಿ, “ಕೆಂಪೇಗೌಡರು ಕೇವಲ ಒಕ್ಕಲಿಗ ಸಮುದಾಯದ ನಾಯಕರಲ್ಲ; ಅವರು ಸರ್ವಜನಾಂಗದ ನಾಡಪ್ರಭು. ಅವರ ಆದರ್ಶಗಳನ್ನು ಇಂದಿನ ಯುವಪೀಳಿಗೆ ಅಳವಡಿಸಿಕೊಂಡು ಹೊಸ ಆಲೋಚನೆಗಳೊಂದಿಗೆ ಸಮಾಜದಲ್ಲಿ ಯಶಸ್ಸು ಸಾಧಿಸಬೇಕು. ಸಮುದಾಯದ ಸಂಘಟನೆ, ಶಿಕ್ಷಣಕ್ಕೆ ಪ್ರೋತ್ಸಾಹ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಒಕ್ಕೂಟದ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದರು. ಕಾರ್ಯಕ್ರಮ ಯಶಸ್ವಿಗೊಳಿಸಿದ ಎಲ್ಲರಿಗೂ ಅವರು ಧನ್ಯವಾದ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಳ್ಳಿಕಾರ್ ಒಕ್ಕಲಿಗ ಸಂಘದ ಅಧ್ಯಕ್ಷ ರಾಮಪ್ಪ ಗೌಡ (ಬೆಟ್ಟದಮನೆ), ಒಕ್ಕಲಿಗರ ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕಾ ಚಂದ್ರಶೇಖರ್ (ಅಂಗಡಿ), ಪೂರ್ಣೇಶ್ ಗೌಡ (ಹೊನ್ನೆಗಂಡಿ), ತಾಲ್ಲೂಕು ಹಳ್ಳಿಕಾರ್ ಒಕ್ಕಲಿಗ ಸಂಘದ ಅಧ್ಯಕ್ಷ ವೆಂಕಟೇಶ್ ಗೌಡ, ಜಿಲ್ಲಾ ಹಳ್ಳಿಕಾರ್ ಸಂಘದ ಕಾರ್ಯದರ್ಶಿ ವಿಜಯ್ ಕುಮಾರ್ (ಅಂಗಡಿ), ಸಣ್ಣಪ್ಪ ಗೌಡ (ಉಡಿಮಕ್ಕಿ) ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



