3ckm3

 

 

ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಕಂದಾಯ ಇಲಾಖೆ ಹಾಗೂ ಒಳಾಡಳಿತ ಇಲಾಖೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲೆಯಲ್ಲಿನ ಬರ ಪರಿಸ್ಥಿತಿ, ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಾಗೂ ಜಿಲ್ಲೆಯ ಇತರೆ ಅಭಿವೃದ್ಧಿ ಕಾಮಗಾರಿಗಳ ಕುರಿತು ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ  ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇ-ಆಫೀಸ್ ಅನುಷ್ಠಾನಗೊಳಿಸಲು ಈಗಾಗಲೇ ಹಲವಾರು ಬಾರಿ ಸೂಚನೆಗಳನ್ನು ನೀಡಿದ್ದರೂ ಕೂಡ ಯಾವ ಕಚೇರಿಯಲ್ಲೂ ಪ್ರಾರಂಭಿಸಿರುವುದಿಲ್ಲ. ಕಂದಾಯ ಇಲಾಖೆ ಹೊರತುಪಡಿಸಿದರೆ ಬೇರೆ ಇಲಾಖೆಯ ಕಚೇರಿಗಳಲ್ಲಿ ಪ್ರಗತಿ ಕಾಣುತ್ತಿಲ್ಲ ಎಂದ ಅವರು, ಇ-ಆಫೀಸ್‌ನಲ್ಲಿ ಕಾರ್ಯ ನಿರ್ವಹಿಸದ ಅಧಿಕಾರಿಗಳಿಗೆ ನೋಟಿಸು ನೀಡುವಂತೆ ತಿಳಿಸಿದ ಅವರು, ಈಗಾಗಲೇ ಜಿಲ್ಲೆಗೆ ೧೩೬ ಕ್ರೋಂಬುಕ್‌ಗಳನ್ನು ನೀಡಲಾಗಿದೆ. ಕಂದಾಯ ಇಲಾಖೆಯಲ್ಲಿ ಕಡತಗಳನ್ನು ಇ-ಆಫೀಸ್ ಮುಖಾಂತರವೇ ವಿಲೇವಾರಿ ಮಾಡುವಂತೆ ತಿಳಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ಇ-ಆಫೀಸ್ ಮೂಲಕವೇ ಕಂದಾಯ ಇಲಾಖೆಯಲ್ಲಿ ಕಡತಗಳನ್ನು ನಿರ್ವಹಿಸಲಾಗುತ್ತಿದೆ. ಒಂದು ವರ್ಷದ ಅವಧಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈವರೆಗೆ ೬೧೮೧ ಕಡತಗಳಿಗೂ ಹೆಚ್ಚು ಹಾಗೂ ೨ ಉಪವಿಭಾಗಾಧಿಕಾರಿಗಳ ಕಚೇರಿಗಳಲ್ಲಿ ೫೯೯೯ ಕಡತಗಳಿಗೂ ಹೆಚ್ಚು, ತಾಲ್ಲೂಕು ಕಚೇರಿಗಳಲ್ಲಿ ೨೯,೩೧೭ ಕಡತಗಳಿಗೂ ಹೆಚ್ಚು ಹಾಗೂ ನಾಡ ಕಚೇರಿಗಳಲ್ಲಿ ೯೯೦೩ ಕಡತಗಳನ್ನು ಇ-ಆಫೀಸ್ ಮೂಲಕವೇ ಸೃಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಮಳೆಮಾಪನ ಕೇಂದ್ರಗಳ ಕುರಿತು ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಗಳು, ಮಳೆಗಾಲದಲ್ಲಿ ಅವು ಚಾಲನೆಯಲ್ಲಿಲ್ಲದಿದ್ದರೆ ಸಮಸ್ಯೆ ಉಂಟಾಗಲಿದೆ. ಮಳೆ  ಮಾಪನ ಕೇಂದ್ರಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು, ದುರಸ್ತಿಯಲ್ಲಿರುವ ಮಳೆ ಮಾಪನ ಕೇಂದ್ರಗಳನ್ನು ದುರಸ್ತಿಪಡಿಸಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ೨೪೨ ಮಳೆ ಮಾಪನ ಕೇಂದ್ರಗಳ ಪೈಕಿ ೧೨೨ ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಉಳಿದ ೧೨೦ ಮಳೆ ಮಾಪನ ಕೇಂದ್ರಗಳ ದುರಸ್ತಿಗೆ ಕಾರ್ಯಾದೇಶ ನೀಡಲಾಗಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದರು.
ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಕೆಲವು ವಿದ್ಯಾರ್ಥಿ ನಿಲಯಗಳಲ್ಲಿ ಬಿಸಿ ನೀರಿನ ಸಮಸ್ಯೆ ಇರುತ್ತದೆ. ವಿದ್ಯುತ್ ಸಮಸ್ಯೆ ಇರುತ್ತದೆ. ಇವುಗಳನ್ನು ಸರಿಪಡಿಸಿ ವಿದ್ಯಾರ್ಥಿಗಳ ಓದಿಗೆ ಉತ್ತಮ ವಾತಾವರಣ ಕಲ್ಪಿಸಬೇಕು. ಅಲ್ಲದೆ, ಅವರನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸಬೇಕು. ಅಲ್ಲದೆ, ಪ್ರತೀ ಹಾಸ್ಟೆಲ್‌ಗಳಿಗೂ ವೈದ್ಯರುಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ತಪಾಸಣೆಯನ್ನು ಮಾಡಬೇಕು ಎಂದು ಸೂಚಿಸಿದರು.
ಈಗಾಗಲೇ ಎಲ್ಲ ಕೆರೆಗಳ ಸರ್ವೇ ಮಾಡಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ವರದಿ ನೀಡುವಂತೆ ಸೂಚಿಸಲಾಗಿತ್ತು. ಒತ್ತುವರಿ ತೆರವು ಬಗ್ಗೆ ಇದುವರೆಗೂ ಮಾಹಿತಿ ಬಂದಿರುವುದಿಲ್ಲ. ಈ ಕುರಿತು ಕೂಡಲೇ ಕ್ರಮ ವಹಿಸಿ ವರದಿ ನೀಡುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ,ಜಿಲ್ಲೆಯಲ್ಲಿ ಒಟ್ಟು ೨೦ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೭ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ೮ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದ ೧೯ ಹಳ್ಳಿಗೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.
ಎಲ್ಲಾ ಇಲಾಖೆಗಳಲ್ಲೂ ಅಧಿಕಾರಿ-ಸಿಬ್ಬಂದಿಗಳು ಕರ್ತವ್ಯ ಆಪ್ ಮೂಲಕವೇ ಹಾಜರಾತಿಯನ್ನು ಹಾಕಬೇಕೆಂದು ಇದೇ ಸಂದರ್ಭದಲ್ಲಿ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಉಪವಿಭಾಗಾಧಿಕಾರಿ ನಟೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಯೋಗಾನಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಂ.ತಿರುಮಲೇಶ್, ಮೆಸ್ಕಾಂ ಅಧೀಕ್ಷಕ ಅಭಿಯಂತರ ಮಂಜುನಾಥ್ ಮುಂತಾದ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ