ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು ಒಂದು ದಿನವೂ ನಡೆಯಲು ಸಾಧ್ಯವೇ ಇಲ್ಲ. ನೀವೇ ಈ ಸಮಾಜದ ನಿಜವಾದ ಶಕ್ತಿ. ಅಧಿಕಾರಿಗಳಿಗೆ ಹೆದರಿಕೊಂಡು ಕೂರಬೇಡಿ, ಧೈರ್ಯವಾಗಿ ನಿಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವುದನ್ನು ಕಲಿಯಿರಿ” ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅವರು ಪೌರಕಾರ್ಮಿಕರಲ್ಲಿ ಆತ್ಮವಿಶ್ವಾಸ ತುಂಬಿದರು.
ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರ ಕುಂದುಕೊರತೆಗಳ ನೇರ ಸಂವಾದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿದರೆ ಕೆಲಸದಿಂದ ತೆಗೆಯುತ್ತಾರೆ, ಇಲ್ಲವೇ ಬೇರೆಡೆಗೆ ವರ್ಗಾವಣೆ ಮಾಡುತ್ತಾರೆ ಎಂಬ ಅನಗತ್ಯ ಭಯ ಪೌರಕಾರ್ಮಿಕರಲ್ಲಿ ಬೇಡ ಎಂದ ಅವರು, ಯಾರಾದರೂ ನಿಮಗೆ ಕಿರುಕುಳ ನೀಡಿದರೆ ಅಥವಾ ಬೆದರಿಕೆ ಹಾಕಿದರೆ ನೇರವಾಗಿ ನನಗೆ ಫೋನ್ ಮಾಡಿ ಅಥವಾ ನಮ್ಮ ಆಯೋಗದ ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ, ಅಂತಹ ಅಧಿಕಾರಿಗಳ ವಿರುದ್ಧ ನಾವೇ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಭರವಸೆ ನೀಡಿದರು.
ಪೌರಕಾರ್ಮಿಕರ ಸಮಸ್ಯೆಗಳ ಸಂಪೂರ್ಣ ವಿವರಗಳ ವರದಿಯನ್ನು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದು ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಪೌರಕಾರ್ಮಿಕ ನಾಗರಾಜ್ ಮಾತನಾಡಿ, ಪೌರ ಕಾರ್ಮಿಕರಿಗಾಗಿ ನಿರ್ಮಿಸಲಾಗಿರುವ ಕ್ವಾರ್ಟರ್ಸ್ಗಳನ್ನು ವಿಳಂಬವಿಲ್ಲದೆ ತಕ್ಷಣವೇ ತಮಗೆ ಹಸ್ತಾಂತರಿಸಬೇಕು ಹಾಗೂ ಅಲ್ಲಿಗೆ ಸರಿಯಾದ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು. ಇದರೊಂದಿಗೆ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬರಬೇಕಾದ ತಲಾ ರೂ. ೧.೫ ಲಕ್ಷ ಬಾಕಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಿಸಬೇಕು ಮತ್ತು ವರ್ಷಗಳಿಂದ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರನ್ನು ತಕ್ಷಣವೇ ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು.
ಪೌರಕಾರ್ಮಿಕರಿಗೆ ನೀಡಲಾಗುವ ಬೆಳಗಿನ ಉಪಾಹಾರದ ಗುಣಮಟ್ಟವನ್ನು ಉತ್ತಮಪಡಿಸಬೇಕು ಮತ್ತು ನಿಯಮಿತವಾಗಿ ಕಡ್ಡಾಯ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ನಡೆಸಬೇಕು ಎಂದು ಆಗ್ರಹಿಸಿದರು.
ಈ ಸಂವಾದ ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷ ಲಲಿತ ರವಿ ನಾಯಕ ಸೇರಿದಂತೆ ಚಿಕ್ಕಮಗಳೂರು ನಗರಸಭೆ, ಕಡೂರು, ಬೀರೂರು, ತರೀಕೆರೆ, ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ಮೂಡಿಗೆರೆ ಹಾಗೂ ಅಜ್ಜಂಪುರ ಸೇರಿದಂತೆ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು, ಸ್ವಚ್ಛತಾ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



